ಕಾರವಾರ:ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸರ್ವೆ ಮಾಡುತ್ತಿರುವುದನ್ನು ಸ್ಥಳೀಯರು ತೀವ್ರವಾಗಿ ವಿರೋಧಿಸಿದ್ದಾರೆ. ಒಂದುವೇಳೆ ಸರ್ಕಾರ ತಮ್ಮ ಜಮೀನು ವಶಪಡಿಸಿಕೊಳ್ಳಲು ಮುಂದಾದರೆ ಪ್ರಾಣ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.
ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಗ್ರಾಮಸ್ಥ ವಿನೋದ ಆರ್.ಗಾಂವ್ಕರ್, ‘25 ವರ್ಷಗಳ ಹಿಂದೆ ಸೀಬರ್ಡ್ ನೌಕಾನೆಲೆ ಯೋಜನೆಗಾಗಿ ನಾವು ಜಮೀನು ಕಳೆದುಕೊಂಡಿದ್ದೆವು. ಅಲ್ಲಿಂದ ಬಂದು ಇಲ್ಲಿ ನೆಲೆಸಿದ್ದೇವೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕಳೆದುಕೊಳ್ಳಲು ಸಿದ್ಧವಿಲ್ಲ. ನಮ್ಮ ಗ್ರಾಮದಲ್ಲಿ ಅದರ ಅಗತ್ಯವಿಲ್ಲ’ ಎಂದು ಹೇಳಿದರು.
‘ಈ ಗ್ರಾಮದ ಬಹುತೇಕ ಮನೆಗಳಲ್ಲಿ ಇಂದಿಗೂ ಕಟ್ಟಿಗೆಯನ್ನೇ ಬಳಸಲಾಗುತ್ತಿದೆ. ಇದಕ್ಕಾಗಿ ಮಹಿಳೆಯರು ದಿನವೂ ಐದು ಕಿ.ಮೀ ದೂರದ ಬೆಟ್ಟಕ್ಕೆ ನಡೆದುಕೊಂಡು ಹೋಗಿ ತಲೆಹೊರೆಯಲ್ಲಿ ಕಟ್ಟಿಗೆ ತರುತ್ತಾರೆ. ಅದನ್ನು ಮಾರಾಟ ಮಾಡಿ ದೊರೆತ ಹಣದಲ್ಲಿ ಜೀವನ ಸಾಗಿಸುತ್ತಾರೆ. ಬಡವರೇ ಹೆಚ್ಚಿರುವ ನಮ್ಮ ಊರಿನಲ್ಲಿ ವಿಮಾನ ನಿಲ್ದಾಣಕ್ಕಾಗಿ 200 ಎಕರೆ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಸರಿ’ ಎಂದು ಅವರು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.