ADVERTISEMENT

ಸ್ಥಳೀಯರಿಂದಲೇ ರಸ್ತೆ ದುರಸ್ತಿ ಪ್ರಾರಂಭ

ಅಣಶಿ ಘಟ್ಟದಲ್ಲಿ ಕುಸಿದ ಮಣ್ಣು ತೆರವು ಕಾರ್ಯ: ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 14:23 IST
Last Updated 24 ಆಗಸ್ಟ್ 2021, 14:23 IST
ಜೊಯಿಡಾ ತಾಲ್ಲೂಕಿನ ಅಣಶಿ ಘಟ್ಟದಲ್ಲಿ ಬೆಳಗಾವಿ- ಸದಾಶಿವಗಡ ರಾಜ್ಯ ಹೆದ್ದಾರಿಯ ಮೇಲೆ ಕುಸಿದ ಗುಡ್ಡ ತೆರವುಗೊಳಿಸುವ ಕಾಮಗಾರಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದರು.
ಜೊಯಿಡಾ ತಾಲ್ಲೂಕಿನ ಅಣಶಿ ಘಟ್ಟದಲ್ಲಿ ಬೆಳಗಾವಿ- ಸದಾಶಿವಗಡ ರಾಜ್ಯ ಹೆದ್ದಾರಿಯ ಮೇಲೆ ಕುಸಿದ ಗುಡ್ಡ ತೆರವುಗೊಳಿಸುವ ಕಾಮಗಾರಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದರು.   

ಜೊಯಿಡಾ: ಬೆಳಗಾವಿ- ಸದಾಶಿವಗಡ ರಾಜ್ಯ ಹೆದ್ದಾರಿಯ ಅಣಶಿ ಘಟ್ಟದಲ್ಲಿ ಗುಡ್ಡ ಕುಸಿದು ಒಂದು ತಿಂಗಳಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಾಗಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಮೇಶ ನಾಯ್ಕ ಮುಂದಾಳತ್ವದಲ್ಲಿ ಮಣ್ಣು ತೆರವು ಕಾರ್ಯ ಆರಂಭವಾಗಿದೆ.

ದುರಸ್ತಿಯತು ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಲ್ಲಿ ಸೋಮವಾರ ಆರಂಭವಾಗಿದ್ದು, ಯಂತ್ರೋಪಕರಣಗಳನ್ನು ಬಳಕೆ ಮಾಡಲಾಗುತ್ತಿದೆ. ಈಗಾಗಲೇ ಎರಡು ದಿನದ ಕಾರ್ಯಾಚರಣೆಯಲ್ಲಿ ಶೇ 50ಕ್ಕಿಂತ ಹೆಚ್ಚಿನ ಕಾಮಗಾರಿ ಪೂರ್ಣಗೊಂಡಿದೆ. ಅಪಾಯಕಾರಿ ಸ್ಥಿತಿಯಲ್ಲಿದ್ದ ಕಲ್ಲು, ಮರಗಳನ್ನು ತೆಗೆಯುವ ಕೆಲಸ ಬಹುತೇಕ ಪೂರ್ಣಗೊಂಡಿದೆ. ಆ.25ರ ಸಂಜೆಯ ಒಳಗೆ ಎಲ್ಲ ಕೆಲಸ ಮುಗಿದು ರಸ್ತೆ ತಾತ್ಕಾಲಿಕವಾಗಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಬಹುದು ಎಂಬ ನಿರೀಕ್ಷೆ ಇದೆ.

ಕಾಮಗಾರಿ ನಿಲ್ಲಿಸಲು ಸೂಚನೆ:

ADVERTISEMENT

ರಸ್ತೆ ತೆರವು ಕಾರ್ಯಾಚರಣೆಯ ವಿಷಯ ತಿಳಿದ ಕಾರವಾರ ತಹಶೀಲ್ದಾರ್, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಾರವಾರ ಪೊಲೀಸ್ ವೃತ್ತ ನಿರೀಕ್ಷಕರು ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಮಣ್ಣು ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಸೂಚಿಸಿದರು. ಆದರೆ, ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸಲಿಲ್ಲ.

ತಮ್ಮ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೂ ಸರಿ, ತೆರವು ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದು ಸವಾಲು ಹಾಕಿದರು. ನಂತರ ಕಾರವಾರ ಅಧಿಕಾರಿಗಳಿಗೆ ಜೊಯಿಡಾ ಜನರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಮಂಗಳವಾರ ಅಣಶಿ ಘಟ್ಟದಲ್ಲಿ ಕೆಲಸ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಜೊಯಿಡಾ ತಹಶೀಲ್ದಾರ್ ಸಂಜಯ ಕಾಂಬಳೆ, ತಾಲ್ಲೂಲು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಮೇಶ ನಾಯ್ಕ, ಅಣಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ ನಾಯ್ಕ, ಪ್ರಮುಖರಾದ ಮಂಗೇಶ ಕಾಮತ, ಕಾಳಿ ಬ್ರಿಗೇಡ್ ಸಂಚಾಲಕ ರವಿ ರೇಡ್ಕರ, ನಾಗೋಡಾ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿಗಂಬರ ದೇಸಾಯಿ, ಉಳವಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಮುಖಾಶಿ, ದತ್ತಾ ನಾಯ್ಕ, ಆರ್.ಎ ಭಟ್ಟ, ರತ್ನಾಕರ ದೇಸಾಯಿ, ಕೃಷ್ಣಾ ಅಣಶಿಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.