ಭಟ್ಕಳ: ತಾಲ್ಲೂಕಿನಾದ್ಯಂತಹ ಶಿವರಾತ್ರಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಮುರುಡೇಶ್ವರದಲ್ಲಿ ಶಿವರಾತ್ರಿ ಆಚರಣೆ ಅದ್ದೂರಿಯಾಗಿ ನಡೆಯುತ್ತಿದ್ದು, ಗುರುವಾರ ಮಧ್ಯರಾತ್ರಿಯಿಂದಲೇ ಭಟ್ಕಳದಿಂದ ಕಾಲ್ನಡಿಗೆಯಲ್ಲಿ ಬಂದ ಸಾವಿರಾರು ಜನ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಸರದಿ ಸಾಲು ಒಲಗ ಮಂಟಪದ ತನಕವೂ ಬೆಳೆದಿತ್ತು. ಮುರುಡೇಶ್ವರ ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ಭಕ್ತರ ಅನುಕೂಲಕ್ಕಾಗಿ ಸಕಲ ಸಿದ್ದತೆ ಮಾಡಿಕೊಂಡಿದ್ದರೂ ಅಲ್ಲಲ್ಲಿ ನೂಕುನುಗ್ಗಲು ಉಂಟಾಯಿತು.
ಸಚಿವ ಮಂಕಾಳ ವೈದ್ಯ ಅವರು ಬೆಳಿಗ್ಗೆ 4 ಗಂಟೆಗೆ ಕುಟುಂಬ ಸಮೇತರಾಗಿ ಮುರುಡೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ರಾತ್ರಿ ಪಲ್ಲಕ್ಕಿ ಉತ್ಸವ, ಜಾಗರಣೆ ನಡೆಯಿತು.
ಪಟ್ಟಣದಲ್ಲಿರುವ ಚೋಳೇಶ್ವರ ದೇವಸ್ಥಾನ, ಬೈಲಕೇರಿಯಲ್ಲಿರುವ ಪಶುಪತಿ ದೇವಸ್ಥಾನದ, ಸೋನಾರಕೇರಿಯಲ್ಲಿರುವ ವಿರೂಪಾಕ್ಷ ದೇವಸ್ಥಾನ ಹಾಗು ಬಂದರನಲ್ಲಿರುವ ಮಂಡಲೇಶ್ವರ ದೇವಸ್ಥಾನ, ಮಾರುಕೇರಿಯ ಕೊಡಕಿಯ ಶಂಭುಲಿಂಗೇಶ್ವರ ದೇವಸ್ಥಾನ, ಬೈಲೂರಿನ ಮಾರ್ಕಂಡೇಶ್ವರ ದೇವಸ್ಥಾನ, ಮೂಡಭಟ್ಕಳದ ಈಶ್ವರ ದೇವಸ್ಥಾನ ಹಾಗೂ ಪಟ್ಟಣದ ಶಾಂತೇರಿ ಕಾಮಾಕ್ಷಿ ದೇವಸ್ಥಾನಗಳಲ್ಲಿ ಭಕ್ತರು ಶಿವನಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಭಷ್ಮಾಬೀಷೇಕ ನೆರವೇರಿಸಿದರು. ರಾತ್ರಿ ಜಾಗರಣೆ, ಭಜನೆ ಕೂಡ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.