ADVERTISEMENT

‘ತೀರ್ಪು ಬರುವವರೆಗೆ ಸಮಿತಿ ರಚನೆ ಬೇಡ’

ದೇವಾಲಯಗಳ ವ್ಯವಸ್ಥಾಪನಾ ಸಮಿತಿ; ಸಚಿವರಿಂದ ಸಭೆ ನಡೆಸುವ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 15:03 IST
Last Updated 2 ಆಗಸ್ಟ್ 2020, 15:03 IST
ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ನೇಮಕ ವಿರೊಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ನೇಮಕ ವಿರೊಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಲಾಯಿತು.   

ಯಲ್ಲಾಪುರ: ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವುದು ಹಾಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವುದನ್ನು ತಕ್ಷಣ ಕೈಬಿಟ್ಟು, ಹಿಂದೂ ದೇವಾಲಯಗಳ ಧಾರ್ಮಿಕ ಸ್ವಾಯತ್ತತೆ, ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ಹೊಸ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿ, ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಹಿಂದೆ ಹಿಂದೂ ದೇವಾಲಯಗಳ ಮೇಲೆ ಹಿಡಿತ ಸಾಧಿಸುವ ಕ್ರಮವನ್ನು ಕೈಬಿಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿತ್ತು. ಹಿಂದಿನ ಸರ್ಕಾರ ಹೈಕೋರ್ಟ್‌ ತೀರ್ಪು ಬರುವವರೆಗೆ ಈ ಕ್ರಮವನ್ನು ಕೈ ಬಿಟ್ಟಿತ್ತು. ಆದರೆ ಈಗ ಹೈಕೋರ್ಟ್‌ ಹಿಂದೂ ದೇವಾಲಯಗಳ ಸ್ವಾಯತ್ತತೆಗೆ ಧಕ್ಕೆಯಾಗದಂತೆ ಹೊಸ ಕಾನೂನು ರಚಿಸುವಂತೆ ಸೂಚಿಸಿದ್ದರೂ, ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತಂದು ತರಾತುರಿಯಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಆಡಳಿತಾಧಿಕಾರಿ ನೇಮಕಕ್ಕೆ ಹೊರಟಿದೆ. ಇದನ್ನು ಕೈ ಬಿಡಬೇಕು. ಸೋಂದಾ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ರಚಿಸಿದ ಮಹಾಮಂಡಳದಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ನಿರ್ಣಯಿಸಿದ ಆರು ನಿರ್ಣಯಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ತಕ್ಷಣ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ ಸಚಿವರು, ಆಗಸ್ಟ್‌ 6ರಂದು ಸಭೆ ನಡೆಸಿ, ಮಾತುಕತೆ ನಡೆಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಹಾಮಂಡಳದ ಕಾರ್ಯಾಧ್ಯಕ್ಷ ವೆಂಕಟೇಶ ನಾಯ್ಕ, ಪ್ರಮುಖರಾದ ವಿಶ್ವನಾಥ ಭಟ್ಟ, ರಾಜೇಂದ್ರಪ್ರಸಾದ ಭಟ್ಟ, ಮಂಗೇಶ ದೇಶಪಾಂಡೆ, ಕೆ.ಎನ್.ಹೆಗಡೆ, ಮಾರುತಿ ಓಂಕಾರ, ರಮೇಶ ಕಾಮತ, ಎಸ್.ಎಸ್. ಪಾಟೀಲ್, ನಾಗಪ್ಪ ಕಡಗಿ, ನಾಗೇಶ ಭಾಗ್ವತ್, ಗಿರೀಶ್ ಭಾಗ್ವತ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.