ಕಾರವಾರ: ‘ಅಮಿತ್ ಶಾ ಅವರು ಮೌನದ ಮಾತುಗಳ ಮೂಲಕ ನಮ್ಮಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ. ಸರ್ಕಾರ ಮತ್ತು ಪಕ್ಷ ಸಂಘಟಿತವಾಗಿ ಕೆಲಸ ಮಾಡಲು ಮತ್ತಷ್ಟು ಶಕ್ತಿ ಕೊಟ್ಟಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ರಾಜ್ಯದ ಪ್ರಭಾರಿ ಅರುಣ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ. ಪಕ್ಷದ ಹಿರಿಯರು ಸ್ಪಷ್ಟಪಡಿಸಿರುವ ಕಾರಣ ಆ ಚರ್ಚೆಗೆ ಆಸ್ಪದವಿಲ್ಲ. ಉಳಿದಂತೆ, ಸಂಪುಟ ವಿಸ್ತರಣೆ, ಪುನರ್ ರಚನೆ ಅಥವಾ ಖಾತೆ ಹಂಚಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ತೀರ್ಮಾನಿಸುತ್ತಾರೆ. ನಾವು ಮಂತ್ರಿಗಳಾಗಿ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದೇವೆ’ ಎಂದರು.
‘ಪಕ್ಷದಲ್ಲಿ ಎಲ್ಲವೂ ಸರಿಯಾಗಿ ಇದ್ದಾಗ ಮಾತ್ರ ಇಂಥ ತೀರ್ಮಾನಗಳು ಬರುತ್ತವೆ. ನಿಮ್ಮ ನಿಮ್ಮ ಜವಾಬ್ದಾರಿಗಳನ್ನು ನಿಭಾಯಿಸಲು ಸಿದ್ಧರಾಗಿ ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಹೇಳಿದ್ದಾರೆ. ಪಕ್ಷದ ಸಂಘಟನೆಯ ಹಿನ್ನೆಲೆಯಲ್ಲಿ ಅವರು ಹೇಳಿದ್ದು ಸರಿಯಿದೆ. ಅದೇನು ಹೊಸದಲ್ಲ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.