
ಕಾರವಾರ: ‘ನದಿ ಜೋಡಣೆ ಯೋಜನೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಅನುಮತಿ ನೀಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸವಾಲು ಹಾಕಿದರು.
‘ನದಿ ಜೋಡಣೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಜಿಲ್ಲೆಯ ಪರಿಸರಕ್ಕೆ ತೊಂದರೆ ಆಗಲಿದೆ. ಈ ಯೋಜನೆಗೆ ನನ್ನ ವಿರೋಧವಿದೆ. ಈ ಬಗ್ಗೆ ಸರ್ಕಾರಕ್ಕೂ ಮನವರಿಕೆ ಮಾಡಿದ್ದೇನೆ. ಯೋಜನೆಗೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡದಿದ್ದರೆ ಯೋಜನೆ ಕಾರ್ಯಗತಗೊಳಿಸುವುದು ಕಷ್ಟ. ಕಾಗೇರಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿ’ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಪ್ರಯತ್ನ ನಡೆದಿತ್ತು. ಯೋಜನೆಯ ವಿಸ್ತೃತ ಯೋಜನಾ ವರದಿ ಆ ಸಮಯದಲ್ಲೇ ಸಿದ್ಧಗೊಂಡಿತ್ತು’ ಎಂದೂ ಹೇಳಿದರು.
‘ಅತಿವೃಷ್ಟಿ ಪರಿಹಾರಕ್ಕೆ ಕೇಂದ್ರದ ನೆರವಿಗೆ ಕಾಯಲಾಗುತ್ತಿದೆ. ಅಲ್ಲಿಂದ ಪರಿಹಾರ ಬಿಡುಗಡೆಯಾದರೆ ಜಿಲ್ಲೆಗೆ ₹100 ಕೋಟಿ ಪರಿಹಾರ ಸಿಗುವ ನಿರೀಕ್ಷೆ ಇದೆ’ ಎಂದರು.
‘ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಒದಗಿಸಲು ಪ್ರಯತ್ನ ಸಾಗಿದೆ. ಇಲ್ಲಿನ ಆರೋಗ್ಯ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಆದ್ಯತೆ ಆಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.