ADVERTISEMENT

‘ವರದಿಗೂ ಕೆಲಸಕ್ಕೂ ಹೊಂದಾಣಿಕೆ ಇರಲಿ’

ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 12:56 IST
Last Updated 18 ಜೂನ್ 2020, 12:56 IST
ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಕಾರವಾರದಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಕಾರವಾರದಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಕಾರವಾರ: ‘ಸೌಭಾಗ್ಯ’ ಯೋಜನೆಯ ಫಲಾನುಭವಿಗಳ ಸಂಖ್ಯೆ ಬಗ್ಗೆ ಹೆಸ್ಕಾಂ ನೀಡಿದ ವರದಿ ಸಮರ್ಪಕವಾಗಿಲ್ಲ. ಅಧಿಕಾರಿಗಳು ಕೊಡುವ ಮಾಹಿತಿಗೂ ವರದಿಗೂ ಹೊಂದಾಣಿಕೆಯಾಗುತ್ತಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

‘ಯೋಜನೆಯಡಿ ಈ ಮೊದಲು ನಮೂದಿಸಿದ ಸಂಖ್ಯೆಗೂ ಈಗ ನೀಡುತ್ತಿರುವುದಕ್ಕೂಬಹಳಅಂತರವಿದೆ. ಫಲಾನುಭವಿಗಳ ಬಗ್ಗೆ ಸಮೀಕ್ಷೆ ಮಾಡಿದ ಮಾಹಿತಿಯನ್ನು ಪದೇಪದೇ ಬದಲಿಸುವುದು ಯಾಕೆ’ ಎಂದುಆಕ್ಷೇಪ ವ್ಯಕ್ತಪಡಿಸಿದರು.

ADVERTISEMENT

ಈ ಬಗ್ಗೆ ಹೆಸ್ಕಾಂ ಅಧಿಕಾರಿಗಳು ನೀಡಿದ ಸಮಜಾಯಿಷಿಯಿಂದ ಅವರು ಸಮಾಧಾನಗೊಳ್ಳಲಿಲ್ಲ. ‘ಬಿ.ಎಸ್.ಎನ್.ಎಲ್ ಮಾದರಿಯಲ್ಲೇ ವಿದ್ಯುತ್ ವಲಯವನ್ನೂ ಸರ್ಕಾರ ಖಾಸಗೀಕರಣ ಮಾಡಿದರೆ ಅಚ್ಚರಿಯಿಲ್ಲ. ನಮಗೂ ಸಂವಿಧಾನ ಗೊತ್ತಿದೆ. ಕೆಲಸ ಮಾಡಿದರೆ ಉಳಿಯುತ್ತೀರಿ, ಇಲ್ಲದಿದ್ದರೆ ಒಂದೇ ಸಹಿಯಲ್ಲಿ ಎಲ್ಲರನ್ನೂ ಮನೆಗೆ ಕಳುಹಿಸಬೇಕಾಗುತ್ತದೆ. ವರದಿ ಮತ್ತು ಕೆಲಸದಲ್ಲಿ ಸಂಯೋಜನೆ ಇರಲಿ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಹತ್ತಿರವಾಗುತ್ತಿದೆ. ಅಲ್ಲದೇ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಹೇಗೆ ಕೆಲಸ ಮಾಡುತ್ತೀರಿ ಎಂಬುದು ಮುಖ್ಯವಾಗುತ್ತದೆ. ಲಾಕ್‌ಡೌನ್ ಕಾರಣದಿಂದ ಹಲವರು ಮನೆಗಳಿಂದಲೇ ಕೆಲಸ ಮುಂದುವರಿಸಿದ್ದಾರೆ. ವಿದ್ಯುತ್ ಇಲ್ಲದಿದ್ದರೆ ಅವರಿಂದಲೂ ಸಾಕಷ್ಟು ದೂರುಗಳು ಬರುತ್ತವೆ. ಆದ್ದರಿಂದವಿದ್ಯುತ್ ಪೂರೈಕೆಯಲ್ಲಿ ಸ್ವಲ್ಪವೂ ಲೋಪವಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಎಚ್1ಎನ್1, ಡೆಂಗಿ, ಮಲೇರಿಯಾದಂಥ ಆರೋಗ್ಯ ಸಮಸ್ಯೆಗಳು ಕರಾವಳಿಯಲ್ಲೇ ಯಾಕೆ ಹೆಚ್ಚು ದಾಖಲಾಗುತ್ತಿವೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಅನಂತಕುಮಾರ ಹೆಗಡೆ ಪ್ರಶ್ನಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕ್ಯಾಪ್ಟನ್ ರಮೇಶ್ ರಾವ್ ಮಾತನಾಡಿ, ‘ಕರಾವಳಿಯ ತೋಟಗಳಲ್ಲಿ ಕೂಲಿ ಕಾರ್ಮಿಕರ ಕೊರತೆಯಿಂದ ಅಡಿಕೆ ಹಾಳೆಗಳನ್ನು ವಿಲೇವಾರಿ ಮಾಡದೇ ಬಿಡಲಾಗುತ್ತಿದೆ. ಅದರಲ್ಲಿ ನೀರು ನಿಂತು ಸೊಳ್ಳೆಗಳು ಹೆಚ್ಚುತ್ತಿವೆ. ಇದಕ್ಕಾಗಿ ತೋಟಗಳಿಗೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ’ ಎಂದರು.

‘ಸಂತ್ರಸ್ತರಿಗೇ ಕೊಡಿ’:ಕಾರವಾರ, ಅಂಕೋಲಾ, ಕುಮಟಾ ತಾಲ್ಲೂಕುಗಳಲ್ಲಿ ನೆರೆ ಪೀಡಿತರಿಗೆ ಗುಂಪು ಮನೆಗಳ ನಿರ್ಮಾಣಕ್ಕೆ ಗುರುತಿಸಿದ ಜಮೀನನ್ನು ಅದೇ ಉದ್ದೇಶಕ್ಕೆ ನೀಡಬೇಕು. ಬೇರೆ ವಸತಿ ಯೋಜನೆಗಳಡಿ ವಿಲೇವಾರಿ ಮಾಡಿದರೆ ಸರ್ಕಾರಿ ಜಮೀನು ಉಳಿಯುವುದೇ ಇಲ್ಲ ಎಂದು ಅನಂತಕುಮಾರ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

‘ಆಯುಷ್ಮಾನ್ ಭಾರತ’ ಯೋಜನೆಯಡಿ ಚೀಟಿಗಳನ್ನು ಸಮಯಕ್ಕೆ ಸರಿಯಾಗಿ ಕೊಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು. ಇದೇವೇಳೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು.

ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ‘ಕೊರೊನಾ ಯೋಧ’ರಿಗೆಇದೇವೇಳೆ ಅಭಿನಂದನೆ ಸಲ್ಲಿಸಲಾಯಿತು.ಶಾಸಕರಾದ ರೂಪಾಲಿ ನಾಯ್ಕ, ಸುನೀಲ ನಾಯ್ಕ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.