ADVERTISEMENT

ಮುಲೈ ಮುಹಿಲನ್ ನೂತನ ಜಿಲ್ಲಾಧಿಕಾರಿ

ಡಾ.ಕೆ.ಹರೀಶಕುಮಾರ್ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 15:05 IST
Last Updated 13 ಫೆಬ್ರುವರಿ 2021, 15:05 IST
ಎಂ.ಪಿ.ಮುಲೈ ಮುಹಿಲನ್
ಎಂ.ಪಿ.ಮುಲೈ ಮುಹಿಲನ್   

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಎಂ.ಪಿ.ಮುಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯಾಗಿದ್ದಾರೆ.

ಅದೇರೀತಿ, ಭಟ್ಕಳ ಉಪ ವಿಭಾಗಾಧಿಕಾರಿ ಎಸ್.ಭರತ್ ಅವರನ್ನು ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿದ್ದ ಡಾ.ಹರೀಶಕುಮಾರ್ ಅವರು 2019ರ ಫೆ.21ರಂದು ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದರು. ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಅವಿಸ್ಮರಣೀಯ ಎಂದು ಅವರು ಹೇಳಿದ್ದಾರೆ.

ADVERTISEMENT

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹವನ್ನು ಸಮರ್ಥವಾಗಿ ನಿಭಾಯಿಸಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವೈದ್ಯಕೀಯ ಸೌಲಭ್ಯಗಳ ಕೊರತೆಯ ನಡುವೆಯೂ ಕೋವಿಡ್‌, ಲಾಕ್‌ಡೌನ್‌ ಅವಧಿಯಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿದ ಸಂತೃಪ್ತಿಯಿದೆ. ಜಿಲ್ಲಾಡಳಿತದ ಆದೇಶ, ಸೂಚನೆ, ಸಲಹೆಗಳಿಗೆ ಸಾರ್ವಜನಿಕರ ಉತ್ತಮ ಸಹಕಾರವೂ ದೊರೆತ ಕಾರಣ ಇದು ಸಾಧ್ಯವಾಯಿತು’ ಎಂದರು.

‘ಜಿಲ್ಲೆಯ ಕರಾವಳಿಯಲ್ಲಿ ಜ್ವಲಂತ ಸಮಸ್ಯೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 66ರ ಭೂ ಸ್ವಾಧೀನ, ಪರಿಹಾರ ಪ್ರಕ್ರಿಯೆಗಳು, ನೌಕಾನೆಲೆಯಲ್ಲಿ ನಾಗರಿಕ ವಿಮಾನ ನಿಲ್ದಾಣ, ಕಾರವಾರದಲ್ಲಿ ಟುಪೆಲೋವ್ ಯುದ್ಧ ವಿಮಾನ ಸ್ಮಾರಕ ಸ್ಥಾಪನೆ, ಕಾಸರಕೋಡು ಬ್ಲೂ ಫ್ಲ್ಯಾಗ್ ಕಡಲತೀರ ಮುಂತಾದ ಮಹತ್ವದ ಯೋಜನೆಗಳು ರೂಪುಗೊಳ್ಳುವಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟ ಹೆಮ್ಮೆಯಿದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.