
ಮುಂಡಗೋಡ: ‘ಕೃತಜ್ಞತಾ ಭಾವನೆಯ ಸಮಾಜ ನಿರ್ಮಾಣದ ಅಗತ್ಯವಿದೆ. ಉಪಕಾರ ಮಾಡಿದವರಿಗೆ ಕೃತಘ್ನತೆ ತೋರದೇ, ಸ್ಪಂದಿಸಿದವರಿಗೆ ಸ್ಮರಿಸದೇ ಹೋದರೇ, ಸಮಾಜ ಸೇವೆ ಮಾಡಲು ಹಿಂದೆ ಮುಂದೆ ನೋಡುವಂತ ಕಾಲ ಬರಬಹುದು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ‘ಸಮಗ್ರ ಗ್ರಾಮ ಅಭಿವೃದ್ಧಿ ಯೋಜನೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳ ಪೈಕಿ 5 ಗ್ರಾಮ ಪಂಚಾಯಿತಿಗಳ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಪಂಚಾಯಿತಿಗಳಿಗೂ ಮುಂದಿನ ದಿನಗಳಲ್ಲಿ ಅನುಕೂಲ ಮಾಡಿಕೊಡಲಾಗುವುದು’ ಎಂದರು.
‘ಶಿಕ್ಷಣವೇ ಎಲ್ಲದಕ್ಕೂ ಪರಿಹಾರವಾಗಿದ್ದು, ಶೈಕ್ಷಣಿಕ ವ್ಯವಸ್ಥೆ ಹೆಚ್ಚಿಸಬೇಕಾದ ತುರ್ತು ಅಗತ್ಯವಿದೆ. ಶೈಕ್ಷಣಿಕವಾಗಿ ಮೇಲ್ಪಂಕ್ತಿಯಲ್ಲಿ ಹೋಗದಿದ್ದರೇ, ಭವಿಷ್ಯದಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಸಮಗ್ರ ಗ್ರಾಮ ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣ, ಸ್ವ–ಸಹಾಯ ಗುಂಪುಗಳಿಗೆ ಸುತ್ತು ನಿಧಿ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.
ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ತಾಕೀತು: ಸರ್ಕಾರಿ ಶಾಲೆಯಾಗಲಿ ಅಥವಾ ಖಾಸಗಿ ಶಾಲೆಯಾಗಲಿ ಈ ಸಲ ತಾಲ್ಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳವಾಗಲೇಬೇಕು. ಇದರಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪಾಲಕರದ್ದಾಗಿದೆ. ಶಿಕ್ಷಕ, ವಿದ್ಯಾರ್ಥಿ ಹಾಗೂ ಪಾಲಕರ ಸಂಯೋಜನೆ ಮುಖ್ಯ. ಪ್ರತಿಯೊಬ್ಬ ಪಾಲಕರು ತಮ್ಮ ಜವಾಬ್ದಾರಿ ನಿಭಾಯಿಸುವ ಮೂಲಕ ಈ ಬಾರಿಯ ಫಲಿತಾಂಶದಲ್ಲಿ ಬಹು ಮುಖ್ಯ ಪಾತ್ರ ವಹಿಸಬೇಕು. ಸರ್ಕಾರ ಸಹ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳದ ಕುರಿತು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆ ಪರಿಣಾಮಕಾರಿ ಫಲಿತಾಂಶಕ್ಕೆ ಕಾರಣವಾಗಲಿದೆ ಎಂದು ಶಾಸಕ ಹೆಬ್ಬಾರ ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ಟಿ.ವೈ.ದಾಸನಕೊಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನರೇಂದ್ರ ಪವಾರ, ಬಿಇಒ ಸುಮಾ ಜಿ., ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಸನ್ನಸಿಂಗ್ ಹಜಾರೆ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ.ನಾಯ್ಕ, ಕಾಂಗ್ರೆಸ್ ಪಕ್ಷದ ಮಹಿಳಾ ಜಿಲ್ಲಾ ಘಟಕ ಅಧ್ಯಕ್ಷೆ, ಶಾರದಾ ರಾಠೋಡ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಹೆಗಡೆ, ಸಹಾಯಕ ಕೃಷಿ ನಿರ್ದೇಶಕ ಕೆ.ಎನ್.ಮಹಾರೆಡ್ಡಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೃಷ್ಣಾ ಕುಳ್ಳೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.