ಕಾರವಾರ: ಭಯೋತ್ಪಾದಕ ಸಂಘಟನೆ ‘ಐಸಿಸ್’ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಬಂಧಿತನಾದ ಆರೋಪಿ, ಜುಫ್ರಿ ಜವಾಹರ್ ದಾಮುದಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್.ಐ.ಎ) ಅಧಿಕಾರಿಗಳು ಶನಿವಾರ ಹೊನ್ನಾವರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಹೊನ್ನಾವರದಲ್ಲೇ ವೈದ್ಯಕೀಯ ತಪಾಸಣೆಯನ್ನೂ ನಡೆಸಿದರು.
ಭಟ್ಕಳದ ಜಾಲಿಯ ಉಮರ್ ಸ್ಟ್ರೀಟ್ ನಿವಾಸಿ ಜುಫ್ರಿಯನ್ನು ಎನ್.ಐ.ಎ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದರು. ಆರೋಪಿಯಿಂದ ವಿವಿಧ ದಾಖಲೆಗಳು, ಹಾರ್ಡ್ಡಿಸ್ಕ್ ಮುಂತಾದವುಗಳನ್ನು ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಮತ್ತಿಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳು, ಅವರಿಂದ ಮಾಹಿತಿ ಕಲೆ ಹಾಕಿದ್ದಾರೆ.
ಈ ಬಗ್ಗೆ ಕಾರವಾರದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ‘ಭಯೋತ್ಪಾದನೆ ಮತ್ತು ದೇಶದ್ರೋಹ ಯಾರಿಂದಲೇ ಆಗಲಿ ಅದನ್ನು ನಿರ್ಲಕ್ಷಿಸುವಂತಿಲ್ಲ. ಭಟ್ಕಳದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಎನ್.ಐ.ಎ ಅಧಿಕಾರಿಗಳು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.