ಭಟ್ಕಳ: ತಾಲ್ಲೂಕಿನ ಮುಟ್ಟಳ್ಳಿ ಶಾಲೆಯ 70ನೇ ವರ್ಷದ ವಾರ್ಷಿಕ ಸ್ನೇಹ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮ ಶನಿವಾರ ಅದ್ದೂರಿಯಾಗಿ ನಡೆಯಿತು. ಶಾಲೆಯ ಮೊದಲ ವಿದ್ಯಾರ್ಥಿಯಾಗಿದ್ದ ಜಟ್ಟಪ್ಪ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.
ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಮಾತನಾಡಿ, ‘ಈಗಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಹಳೇ ವಿದ್ಯಾರ್ಥಿಗಳು ಶ್ರಮಿಸಬೇಕು. ವಾರ್ಷಿಕೋತ್ಸವ ಕೇವಲ ಮನೋರಂಜನೆಗೆ ಸೀಮಿತವಾಗದಿರಲಿ ಎಂದರು.
ಭಟ್ಕಳ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ.ಎನ್.ನಾಯ್ಕ ಮಾತನಾಡಿ, ‘ಸಂಸ್ಕೃತಿ, ಸಾಂಸ್ಕೃತಿಕ ಮೌಲ್ಯಗಳ ವಿದ್ಯಾರ್ಥಿಗಳಿಗೆ ತಿಳಿಸುವಲ್ಲಿ ಇಂತಹ ಹೊಸತನದ ಅಗತ್ಯ ಇರುತ್ತದೆ’ ಎಂದು ಹೇಳಿದರು.
ತಾಲ್ಲೂಕು ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಲಭ್ಯ ಒಳಗೊಂಡು ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಪೋಷಕರಿಗೆ ಖಾಸಗಿ ಶಾಲೆಗಳ ವ್ಯಾಮೋಹ ವ್ಯಾಪಿಸಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವುದು ಆತಂಕಕಾರಿ’ ಎಂದರು.
ಇದಕ್ಕೂ ಮುನ್ನ ಮೂಡಭಟ್ಕಳ ಬೈಪಾಸ್ನಿಂದ ಶಾಲೆ ಎಸ್ಡಿಎಂಸಿ ಸದಸ್ಯರು ಹಾಗೂ ಶಾಲೆ ಹಳೆ ವಿದ್ಯಾರ್ಥಿಗಳು ಸಂಘದಿಂದ ನಿವೃತ್ತಿ ಹೊಂದಿದ ಹಳೆ ಶಿಕ್ಷಕರನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು.
ಸಭಾ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಹಳೇ ಶಿಕ್ಷಕರಿಗೆ, ವಿವಿಧ ಕ್ಷೇತ್ರಗಳ ಸಾಧಕ ಹಳೆ ವಿದ್ಯಾರ್ಥಿಗಳಿಗೆ,ದಾನಿಗಳಿಗೆ ಸನ್ಮಾನಿಸಲಾಯಿತು. ಮುಟ್ಟಳ್ಳಿ ಗ್ರಾಮಪಂಚಾಯಿತಿ ರಜನಿ ನಾಯ್ಕ, ಡಿಐಇಟಿ ಕುಮಟ ಎಸ್.ಪಿ.ಭಟ್ಟ, ಬಿ.ಆರ್.ಸಿ.ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಉಲ್ಲಾಸ ನಾಯ್ಕ, ಸಿಆರ್ಪಿ ಜಯಶ್ರೀ ಆಚಾರಿ, ಎಸ್ಡಿಎಂಸಿ ಅಧ್ಯಕ್ಷ ಅನಂತ ನಾಯ್ಕ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ರವಿ ನಾಯ್ಕ, ನಿವೃತ್ತಿ ಶಿಕ್ಷಕ ಎಂ.ಕೆ.ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.