ಅಂಕೋಲಾ: ತಾಲ್ಲೂಕಿನ ಹಾರವಾಡ ರೇಲ್ವೆ ಮೇಲ್ಸೇತುವೆ ಬಳಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ, ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದಿದೆ. ಅಫಘಾತದಲ್ಲಿ ಕಾರು ಸುಟ್ಟು ಕರಕಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಅನಂತಪುರದ ವಿದ್ಯಾರ್ಥಿ, ರವಿತೇಜ ಉಪ್ಪಾರ್ (21) ಮೃತರು. ಕಾರು ಚಾಲಕ ಪವನ.ಬಿ, ಬಾಲಚಂದ್ರ ಕೈತಾವರ, ಮೋಹನ ಸಾಯಿ ಮತ್ತು ಬೊಯೆಜ್ ಕುಮಾರ ಗಾಯಗೊಂಡಿದ್ದಾರೆ. ಇವರು ಆಂಧ್ರಪ್ರದೇಶದ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದರು. ಗೋವಾ ಪ್ರವಾಸಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರವಾರ– ಅಂಕೋಲಾ ಶಾಸಕಿ ರೂಪಾಲಿ ನಾಯ್ಕ, ಅಪಘಾತ ನಡೆದ ಸಂದರ್ಭದಲ್ಲಿ ಅಂಕೋಲಾ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಇದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳವನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ಸಿ.ಪಿ.ಐ ಸಂತೋಷ ಶೆಟ್ಟಿ, ಪಿ.ಎಸ್.ಐ ಪ್ರವೀಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಿ.ಎಸ್.ಐ ಮಹಾಂತೇಶ ವಾಲ್ಮೀಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.