ಭಟ್ಕಳ: ಜಾಲಿ ಪಟ್ಟಣ ಪಂಚಾಯ್ತಿಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಿದಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರ ಪಟ್ಟಣ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಜಾಲಿ ಗ್ರಾಮ ಪಂಚಾಯ್ತಿಯನ್ನು ಏಳು ವರ್ಷಗಳ ಹಿಂದೆ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಆದರೆ, ಅಭಿವೃದ್ಧಿ ದೃಷ್ಟಿಯಿಂದ ಏನೂ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯ್ತಿ ಆದ ಬಳಿಕ ತೆರಿಗೆ ಏರಿಕೆಯಾಗಿ, ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಜಾಲಿ ಗ್ರಾಮದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಟ್ಟಣ ಪಂಚಾಯ್ತಿಯಿಂದ ನಗರಸಭೆಯಾಗಿ ಮಾಡಿದರೆ ತೆರಿಗೆ ಹೆಚ್ಚಾಗಿ, ಆರ್ಥಿಕವಾಗಿ ಮತ್ತಷ್ಟು ಹೊರೆಯಾಗಲಿದೆ. ರಿಯಲ್ ಎಸ್ಟೇಟ್ ದಂಧೆ ಹೆಚ್ಚಾಗಲಿದ್ದು, ಕೃಷಿ ಭೂಮಿ ಅಸ್ತಿತ್ವ ಕಳೆದುಕೊಳ್ಳಲಿದೆ. ಪಟ್ಟಣ ಪಂಚಾಯ್ತಿಯಾಗಿರುವಾಗಲೇ ಮೂಲಸೌಕರ್ಯ ಕಲ್ಪಿಸದೆ, ನಗರಸಭೆಯಾಗಿ ಮಾಡಲು ಪ್ರಸ್ತಾವ ಸಲ್ಲಿಸಿರುವುದು ಹಾಸ್ಯಾಸ್ಪದ ಎಂದರು.
ಜನರ ಅಭಿಪ್ರಾಯ ಕೇಳದೆ, ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಹುನ್ನಾರ ನಡೆಸಲಾಗುತ್ತಿದೆ. ಮೊದಲು, ಜಾಲಿ ಪಟ್ಟಣ ಪಂಚಾಯ್ತಿಗೆ ಸರ್ಕಾರ ಸಮರ್ಪಕ ಸೌಕರ್ಯ ಒದಗಿಸಬೇಕು. ಯಾವುದೇ ಕಾರಣಕ್ಕೂ ನಗರಸಭೆ ಮಾಡಲು ಮುಂದಾಗಬಾರದು ಎಂದು ಆಗ್ರಹಿಸಿದರು.
ನಗರಸಭೆ ಮಾಡುವ ಪ್ರಸ್ತಾವ ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು
ಜಾಲಿ ಪಟ್ಟಣ ಪಂಚಾಯ್ತಿ ಸದಸ್ಯರಾದ ದಯಾನಂದ ನಾಯ್ಕ, ಪದ್ಮಾವತಿ ನಾಯ್ಕ ಸೇರಿದಂತೆ ಸಾರ್ವಜನಿಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.