ಶಿರಸಿ: ಅಭಿವೃದ್ಧಿ ಕೆಲಸಗಳಷ್ಟೆ ಚುನಾವಣೆ ಗೆಲುವಿನ ಮಾನದಂಡ ಎಂಬ ಕಲ್ಪನೆಯಲ್ಲಿ ಜನಪ್ರತಿನಿಧಿಗಳು ನಿರ್ಲಕ್ಷಿಸಬಾರದು. ಪಕ್ಷದ ಸಂಘಟನೆ ಬಲಪಡಿಸಿದರೆ ಮಾತ್ರ ಗೆಲುವು ಸುಲಭವಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಇಲ್ಲಿನ ದೀನ ದಯಾಳ ಭವನದಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗೂ ಚುನಾವಣೆ ಹತ್ತಿರವಿದೆ. ಹೀಗಾಗಿ ಸೈನಿಕರ ಮಾದರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ’ ಎಂದರು.
‘ಜಿಲ್ಲೆಯ ಎಲ್ಲ ಆರು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವುದು ನಮ್ಮ ಮುಂದಿನ ಗುರಿ. ಶಾಸಕರು ಯಾವುದೇ ಚುನಾವಣೆಯನ್ನು ಹಗುರವಾಗಿ ಪರಿಗಣಿಸಬಾರದು. ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ. ಅವರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ‘ಕಾರ್ಯಕರ್ತರಿಗೆ ಪ್ರಶಿಕ್ಷಣ ವರ್ಗ ಆಯೋಜಿಸಿ ಮಾಹಿತಿ ನೀಡಲಾಗುತ್ತಿದೆ. ಸಂಘಟನಾತ್ಮಕವಾಗಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ನಿರಂತರ ಸಭೆ, ಕಾರ್ಯಾಗಾರ ಆಯೋಜಿಸಲಾಗುತ್ತಿದೆ’ ಎಂದರು.
ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ಗ್ರಾಮೀಣಾಭಿವೃದ್ಧಿ ವಿಕೇಂದ್ರಿಕರಣ ಸಮಿತಿ ರಾಜ್ಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಸುನೀಲ ಹೆಗಡೆ, ಎನ್.ಎಸ್.ಹೆಗಡೆ, ಕೋರ್ ಕಮಿಟಿ ಸದಸ್ಯ ಆರ್.ಡಿ.ಹೆಗಡೆ ಜಾನ್ಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಮೀನುಗಾರ ಪ್ರಕೋಷ್ಠದ ಅಧ್ಯಕ್ಷ ಹೂವಾ ಖಂಡೇಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.