
ಶಿರಸಿ: ‘ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳನ್ನು ಹೊಂದಿದ ಸಮಾಜದ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜ.6ರಂದು ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಬ್ರಹ್ಮಶ್ರೀ ನಾರಾಯಣ ಗುರುಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ತ ಈಡಿಗರಿಗೆ 5 ಎಕರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡಬೇಕು. ಸಮಾಜವನ್ನು ಈಗಿರುವ 2ಎ ಯಿಂದ ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಉ ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರು ಸ್ಥಾಪಿಸಬೇಕು’ ಎಂದರು.
‘ಈಡಿಗ ಸಮಾಜದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ ಮೊಕ್ಕದ್ದಮೆಗಳನ್ನು ಕೂಡಲೇ ಹಿಂತೆಗೆದುಕೊಂಡು ದೇವಸ್ಥಾನಕ್ಕೆ ಭದ್ರತೆ ಹಾಗೂ ಕ್ಷೇತ್ರಕ್ಕೆ ಅಗತ್ಯ ಭೂಮಿ ಮಂಜೂರುಗೊಳಿಸಬೇಕು. ಕೋಟಿ ಚೆನ್ನಯ್ಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗಾಗಿ ಕೋಟಿ ಚನ್ನಯ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿ ಬಜೆಟ್ನಲ್ಲಿ ಕನಿಷ್ಠ ₹100 ಕೋಟಿ ನೀಡಬೇಕು ಎಂದು ಪಾದಯಾತ್ರೆ ವೇಳೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದರು.
‘ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರದ ಜತೆ ಜಮೀನು, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಸಂದರ್ಭದಲ್ಲಿ ಸಮುದಾಯದ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ, ₹5 ಲಕ್ಷ ನಗದು ಪುರಸ್ಕಾರ ನೀಡಬೇಕು. ಉತ್ತರಕನ್ನಡ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸಮಾಜದ ಬಾಂಧವರು ಅರಣ್ಯ ಪ್ರದೇಶದಲ್ಲಿ ಉಳುವೆ ಮಾಡಿಕೊಂಡು ಮನೆ ನಿರ್ಮಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಅವರ ಜಮೀನು ಸಕ್ರಮಕ್ಕೆ ವಿಶೇಷ ಆದ್ಯತೆ ನೀಡಬೇಕು. ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ವಿಶೇಷ ಕಾಳಜಿ ವಹಿಸಬೇಕು’ ಎಂದು ಒತ್ತಾಯಿಸಿದರು.
ಸಮಾಜದ ಪ್ರಮುಖರಾದ ದೇವರಾಜ ನಾಯ್ಕ, ಶೇಖರ ಪೂಜಾರಿ, ಗಣೇಶ ನಾಯ್ಕ, ರವಿ ಪೂಜಾರಿ, ಎನ್.ಜಿ.ನಾಯ್ಕ, ವಿನಾಯಕ, ದಿನೇಶ ನಾಯ್ಕ, ಮಂಜು ನಾಯ್ಕ ತೆಪ್ಪಿಗೆ ಮತ್ತಿತರರು ಇದ್ದರು.
‘ಶ್ವೇತಪತ್ರ ಹೊರಡಿಸಬೇಕು’
‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಈಡಿಗ ಸಾಮಧಾರಿ ಸಮುದಾಯ ಕಡೆಗಣಿಸಿದ್ದು ಅಧಿಕಾರ ಹಿಡಿಯುವ ಆಸೆಗಾಗಿ ಹಿಂದುಳಿದ ಅಲ್ಪಸಂಖ್ಯಾತ ಪರಿಶಿಷ್ಟ ಜಾತಿ-ಪಂಗಡಗಳು ನೆನಪಾಗುತ್ತದೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಕಾಂಗ್ರೆಸ್ನ ಮುಖವಾಣಿ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿ ಹಾಗೂ ಈಗಿನ ಎರಡೂವರೆ ವರ್ಷದ ಅವಧಿಯಲ್ಲಿ ಸಮುದಾಯಕ್ಕೆ ನೀಡಿದ ಕೊಡುಗೆ ಶ್ವೇತಪತ್ರ ಹೊರಡಿಸಬೇಕು’ ಎಂದು ಪ್ರಣವಾನಂದ ಸ್ವಾಮೀಜಿ ಮಾಹಿತಿ ನೀಡಿದರು. ‘ಅಹಿಂದ ಹಾಗೂ ಹಿಂದುಳಿದವರ ಹೆಸರಿನಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಈ ಸಮಾಜಕ್ಕೆ ಏನೂ ಮಾಡಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದು. ಆದ್ದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರವಾದ ಚಿತ್ತಾಪುರದ ಕರದಾಳದ ಶಕ್ತಿಪೀಠದಿಂದ 700 ಕಿ.ಮೀ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಾಗುತ್ತದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.