ಕಾರವಾರ: ನಗರದಲ್ಲಿ ಜನರ ಅನಗತ್ಯ ಸಂಚಾರವನ್ನು ಸಂಪೂರ್ಣವಾಗಿ ತಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮುಖ್ಯ ರಸ್ತೆಗಳನ್ನು ಸಂಪರ್ಕಿಸುವ ವಿವಿಧ 13 ಅಡ್ಡರಸ್ತೆಗಳನ್ನು ಬುಧವಾರ ರಾತ್ರಿ ಮುಚ್ಚಿದ್ದಾರೆ.
ಕೋವಿಡ್ ಸೋಂಕಿತರು ಹೆಚ್ಚಿರುವ ಕಾರಣ ನಗರವನ್ನು ವಿಶೇಷ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಆದ್ದರಿಂದ ಇಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿದೆ. ಜನರ ಅನಗತ್ಯ ಸಂಚಾರವನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸಲಾಗಿದೆ. ಆದರೂ ಹಲವರು ಪೊಲೀಸರ ಕಣ್ಣುತಪ್ಪಿಸಿ ಅಡ್ಡರಸ್ತೆಗಳ ಮೂಲಕ ನಗರದಲ್ಲಿ ಸಂಚರಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಿ.ಪಿ.ಐ ಸಂತೋಷ ಶೆಟ್ಟಿ, ‘ಹೆದ್ದಾರಿಗಳನ್ನು ಮತ್ತು ಮುಖ್ಯರಸ್ತೆಗಳನ್ನು ಸಂಪರ್ಕಿಸುವ ಒಳ ರಸ್ತೆಗಳನ್ನು ಮುಚ್ಚಲಾಗಿದೆ. ಪೊಲೀಸರು ಇರುವ ಚೆಕ್ಪೋಸ್ಟ್ಗಳನ್ನು ಅಳವಡಿಸಲಾಗಿರುವ ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶವಿದೆ. ಆದರೆ, ವಿನಾ ಕಾರಣ ಓಡಾಟಕ್ಕೆ ಅವಕಾಶವಿಲ್ಲ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.