
ಅಂಕೋಲಾ: ತಾಲ್ಲೂಕಿನ ಕೇಣಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ನೂರಾರು ಮೀನುಗಾರರು ಬುಧವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ತಹಶೀಲ್ದಾರ್ ಡಾ.ಚಿಕ್ಕಪ್ಪ ನಾಯಕ ಅವರಿಗೆ ಮನವಿ ಸಲ್ಲಿಸಿ ಕಚೇರಿಯ ಹೊರಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
‘ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗಾ, ಕಾಳಿ, ಸೀಬರ್ಡ್ ಇನ್ನಿತರ ಹಲವು ಯೋಜನೆಗಳಿಂದ ಸಾವಿರಾರು ಸಂಖ್ಯೆಯ ರೈತರು ತಮ್ಮ ನೆಲೆ ಕಳೆದುಕೊಂಡು ನಿರಾಶ್ರಿತರಾಗಿ ಸಂಕಟದ ಜೀವನ ನಡೆಸುತ್ತಿದ್ದಾರೆ. ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣವಾದರೆ ಕೇವಲ ಕೇಣಿಗೆ ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮದವರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಖಾಸಗಿ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದು ಜನವಿರೋಧಿ ಮತ್ತು ಪರಿಸರ ವಿರೋಧಿ ಕ್ರಮವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಸಾವಿರಾರು ಜನರ ಬದುಕನ್ನು ನಾಶಮಾಡಬೇಡಿ. ಈ ಯೋಜನೆ ಕೈಬಿಡುವವರೆಗೂ ನಮ್ಮ ಹೋರಾಟ ನಿರಂತರ ನಡೆಯುತ್ತಲೇ ಇರುತ್ತದೆ’ ಎಂದು ಮನವಿಯಲ್ಲಿ ತಿಳಿಸಿದರು.
ನಿವೃತ್ತ ಪ್ರಾಧ್ಯಾಪಕ, ಕಡಲ ವಿಜ್ಞಾನಿ ಡಾ.ವಿ.ಎನ್. ನಾಯಕ, ಹಾಲಕ್ಕಿ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತ ಗೌಡ, ಭಾವಿಕೇರಿ ಗ್ರಾಮ ಪಂಚಾಯಿತಿ ಸದಸ್ಯ ಉದಯ ನಾಯಕ, ಸಂಜೀವ ಬಲೆಗಾರ, ಮಾರುತಿ ಹರಿಕಂತ್ರ, ಗಣಪತಿ ಮಾಂಗ್ರೆ ಸೇರಿದಂತೆ ನೂರಾರು ಜನರು ಇದ್ದರು. ನಂತರ ಪ್ರತಿಭಟನಕಾರರು ತಹಶೀಲ್ದಾರ್ ಕಚೇರಿಯ ಆವರಣದ ಎದುರು ಪೆಂಡಾಲ್ ಹಾಕಿ ಧರಣಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.