ADVERTISEMENT

ಕಾರು ಅಪಘಾತ: ಸಚಿವರ ಸಭೆಗೆ ತೆರಳುತ್ತಿದ್ದ ಪಿಡಬ್ಲ್ಯುಡಿ ಎಂಜಿನಿಯರ್ ಸಾವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 6:54 IST
Last Updated 7 ಆಗಸ್ಟ್ 2021, 6:54 IST
ಅಪಘಾತಕ್ಕೀಡಾಗಿರುವ ಕಾರು
ಅಪಘಾತಕ್ಕೀಡಾಗಿರುವ ಕಾರು    

ಅಂಕೋಲಾ: ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಕಾರವಾರಕ್ಕೆ ಬರುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಬಾಳೇಗುಳಿ ಕ್ರಾಸ್ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಲೋಕೋಪಯೋಗಿ ಇಲಾಖೆಯ ಸಿದ್ದಾಪುರ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುದುಕಣ್ಣನವರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಕೃಷ್ಣಾರೆಡ್ಡಿ, ಟೆಕ್ನಿಷಿಯನ್ ರವಿ ಪಾಟೀಲ ಹಾಗೂ ಇಲಾಖೆ ಸಿಬ್ಬಂದಿ ಚೇತನ್ ಇವರಿಗೆ ಅಂಕೋಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಲಾಗಿದೆ.

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಚಾಲಕನಿಗೆ ಸಾಧಾರಣ ಸ್ವರೂಪದ ಗಾಯಗಳಾಗಿವೆ. ಸಚಿವ ಶಿವರಾಮ ಹೆಬ್ಬಾರ ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ಸಾಂತ್ವನ ಹೇಳಿದರು. ಗಂಭೀರ ಸ್ವರೂಪದ ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್.ಪಿ ಶಿವಪ್ರಕಾಶ ದೇವರಾಜು, ಉಪ ವಿಭಾಗಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ADVERTISEMENT

ಸಭೆ ರದ್ದು

ಅಪಘಾತದಲ್ಲಿ ಅಧಿಕಾರಿ ಮೃತಪಟ್ಟ ಕಾರಣ, ಸಚಿವ ಹೆಬ್ಬಾರ ಅವರು ಸಭೆಯನ್ನು ರದ್ದು ಪಡಿಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಅಣಶಿಯ ಭೂ ಕುಸಿತದ ಪ್ರದೇಶ, ಕದ್ರಾ ಹಾಗೂ ಮಲ್ಲಾಪುರದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.