ಕಾರವಾರ:ಶಾಲೆ ಪ್ರಾರಂಭವಾದ ದಿನದಿಂದಲೇ ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಬೇಕು. ಅಂದಿನ ಪಾಠವನ್ನು ಅಂದೇ ಓದುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಚೈತ್ರಾ ಕೊಠಾರಕರಸಲಹೆ ನೀಡಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸ ಮಾಡಿದರೆ ಪರೀಕ್ಷಾ ಸಮಯದಲ್ಲಿ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ಇದು ಮುಂದೆ ಸಾಕಷ್ಟುಸಹಕಾರಿಯಾಗುತ್ತದೆ. ಶಾಲಾ ಶಿಕ್ಷಕರು ಕೂಡಾ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಓದಲು ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಮಾತನಾಡಿ, ‘ಈ ಬಾರಿ ಎಲ್ಲೆಡೆ ನೀರಿನ ಸಮಸ್ಯೆ ಉಂಟಾಗಿದ್ದರೂ ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. 2019–20ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಯಿಂದ ಆಂಗ್ಲಮಾಧ್ಯಮ ಪ್ರಾರಂಭಿಸಲಾಗುತ್ತಿದೆ.ಬಡವರಿಗೆ ಇದು ಸಹಕಾರಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ,ಶಾಲೆಗೆ ದಾಖಲಾಗುವ ಮಕ್ಕಳನ್ನುವಿನೂತನವಾಗಿ ಸ್ವಾಗತಿಸಲಾಯಿತು. ಶಿಕ್ಷಣ ಇಲಾಖೆಯಿಂದ ನೀಡುವ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಣಾಧಿಕಾರಿ ಲತಾ ನಾಯಕ, ಕನ್ನಡ ಸಾಹಿತ್ಯ ಪರಿಷತ್ತಿನತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹರಪನಹಳ್ಳಿ, ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮಗೌಡ, ಮುಖಂಡ ಪ್ರೇಮಾನಂದ ಗುನಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.