ಗೃಹಲಕ್ಷ್ಮಿ ಯೋಜನೆ
ಕಾರವಾರ: ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲಾಗಿದ್ದು, ಜಿಲ್ಲೆಯಲ್ಲಿ ಏಳು ಮಂದಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ.
‘ಸಾಮಾಜಿಕವಾಗಿ ಮುನ್ನೆಲೆಗೆ ಬಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಯೋಜನೆಯ ವ್ಯಾಪ್ತಿಗೆ ತರುವ ಸರ್ಕಾರದ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಪತ್ತೆ ಹಚ್ಚಿ, ಅವರಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ಎಂಟು ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಏಳು ಜನರಿಗೆ ಈಗಾಗಲೇ ಮಾಸಿಕ ತಲಾ ₹2 ಸಾವಿರ ಬ್ಯಾಂಕ್ ಖಾತೆಗೆ ಪಾವತಿಯಾಗುತ್ತಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ ತಿಳಿಸಿರು.
‘ಸಾರ್ವಜನಿಕವಾಗಿ ತಮ್ಮ ಗುರುತನ್ನು ಮರೆ ಮಾಚಲು ಪ್ರಯತ್ನಿಸುವ ಲಿಂಗತ್ವ ಅಲ್ಪ ಸಂಖ್ಯಾತರನ್ನು ಮನವೊಲಿಸಿ, ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಡಲಾಗಿದೆ. ಜಿಲ್ಲೆಯಲ್ಲಿ ಅಂದಾಜು 30 ರಿಂದ 50 ಮಂದಿ ಲಿಂಗತ್ವ ಅಲ್ಪ ಸಂಖ್ಯಾತರು ಇರಬಹುದು. ಆದರೆ ಈ ಬಗ್ಗೆ ನಿಖರವಾದ ಸಮೀಕ್ಷೆ ನಡೆಸುವ ಅಗತ್ಯವಿದೆ’ ಎಂದೂ ಹೇಳಿದರು.
‘ಗೃಹಲಕ್ಷ್ಮಿ ಯೋಜನೆಯಿಂದ ದೊರೆಯುತ್ತಿರುವ ಮೊತ್ತದಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಅನುಕೂಲವಾಗಿದೆ. ಗೃಹಲಕ್ಷ್ಮಿ ಮೊತ್ತವನ್ನು ಬಳಸಿಕೊಂಡು ಸ್ವಂತ ಉದ್ಯಮ ಮಾಡುವ ಕನಸಿದೆ. ಭಿಕ್ಷಾಟನೆ ಮಾಡುವುದು ನಮಗೂ ಇಷ್ಠವಿಲ್ಲ’ ಎನ್ನುತ್ತಾರೆ ಲಿಂಗತ್ವ ಅಲ್ಪ ಸಂಖ್ಯಾತೆ ಆಯಿಷಾ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.