
ಶಿರಸಿ: ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಕೂಟದಲ್ಲಿ ಸರ್ವತೋಮುಖ ಸಾಧನೆ ತೋರಿದ ಹೊನ್ನಾವರ ತಾಲ್ಲೂಕು ಸಮಗ್ರ ವೀರಾಗ್ರಣಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತೀವ್ರ ಪೈಪೋಟಿ ನೀಡಿದ ಸಿದ್ಧಾಪುರ ತಾಲ್ಲೂಕು ರನ್ನರ್ ಅಪ್ ಸ್ಥಾನಕ್ಕೆ ಭಾಜನವಾಯಿತು.
ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ನಡೆದ ಪಂದ್ಯಾವಳಿಗಳ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ, ‘ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಕ್ತಿ ಹಾಗೂ ಉತ್ಸಾಹ ನಿರೀಕ್ಷೆಗೂ ಮೀರಿದ್ದಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.
‘ಸಿಬ್ಬಂದಿ ಕ್ರೀಡಾ ಪ್ರದರ್ಶನವು ಕೆಲಸದ ಒತ್ತಡದ ನಡುವೆಯೂ ಅವರಲ್ಲಿರುವ ಸೃಜನಶೀಲತೆ ಪ್ರತಿಬಿಂಬಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ರಚನಾತ್ಮಕ ಪಂದ್ಯಾವಳಿಗಳನ್ನು ನಡೆಸಿ ಪ್ರೋತ್ಸಾಹಿಸಲಾಗುವುದು’ ಎಂದು ಭರವಸೆ ನೀಡಿದರು.
ಎರಡು ದಿನ ನಡೆದ ಕ್ರೀಡಾಕೂಟದಲ್ಲಿ ಜಾನಪದ ಗೀತೆ, ಭಾವಗೀತೆ, ನೃತ್ಯ, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಸಾವಿರಾರು ಸಿಬ್ಬಂದಿ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ, ಪ್ರಕಾಶ ಹಾಲಮ್ಮನವರ್, ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತ ಹಾಗೂ ವಿವಿಧ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಯುವ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.