ಶಿರಸಿ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಕಾರ್ಮಿಕರನ್ನು ಬಳಸಿ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆಯ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಕರಣ ಸಂಬಂಧ ಕಂದಾಯ ಅಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಗರದ ಭಗತ್ಸಿಂಗ್ ರಸ್ತೆಯ ಸಮೀಪ ಹಳೆ ಕಟ್ಟಡ ತೆರವು ಮಾಡಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಶೌಚದ ಹಳೆಯ ಗುಂಡಿಯನ್ನು ಕಾರ್ಮಿಕರಿಬ್ಬರು ಶನಿವಾರ ಸ್ವಚ್ಛಗೊಳಿಸಿದ್ದಾರೆ. ಅಲ್ಲದೇ, ಗುಂಡಿಯಿಂದ ಹೊರತೆಗೆದ ತ್ಯಾಜ್ಯವನ್ನು ತಲೆಯ ಮೇಲೆ ಹೊತ್ತು ಸಮೀಪದ ವಾಹನಕ್ಕೆ ಹಾಕಿದ್ದಾರೆ. ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವಿಡಿಯೊ ಮಾಡಿ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದಾರೆ.
ಪ್ರಕರಣ ಸಂಬಂಧ ತಹಶೀಲ್ದಾರ್ ಶ್ರೀಧರ ಮುಂದಲಮನಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದು, ‘ಶೌಚಾಲಯದ ಗುಂಡಿಯನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸಿದ ವಿಷಯಕ್ಕೆ ಸಂಬಂಧಿಸಿ ಸ್ಥಳಕ್ಕೆ ಕಂದಾಯ ಅಧಿಕಾರಿಯನ್ನು ಕಳುಹಿಸಿ ಪ್ರಾಥಮಿಕ ವರದಿಯನ್ನು ಈಗಾಗಲೇ ಪಡೆಯಲಾಗಿದೆ. ಈ ಬಗ್ಗೆ ನಗರಸಭೆಯಿಂದಲೂ ವರದಿ ನೀಡುವಂತೆ ಪೌರಾಯುಕ್ತರಿಗೆ ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಅಧ್ಯಕ್ಷತೆಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲಾಗುವುದು’ ಎಂದರು.
‘ಘಟನೆಗೆ ಕಾರಣರಾದವರ ವಿರುದ್ಧ ನಗರಸಭೆಯು ಸ್ವಯಂಪ್ರೇರಿತ ಪ್ರಕರಣವನ್ನು ಸೋಮವಾರ ದಾಖಲಿಸಲಿದೆ' ಎಂದು ಪೌರಾಯುಕ್ತ ಕಾಂತರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.