ಶಿರಸಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಅಂದಾಜು ₹1.25 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಬಂಡಲ ಗ್ರಾಮ ಪಂಚಾಯಿತಿಯ ನಾಗೇತೋಟದ ಹೊಳೆಗೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬಂಡಲ, ದೇವನಹಳ್ಳಿ, ಮಂಜಗುಣಿ ಗ್ರಾಮ ಪಂಚಾಯಿತಿಗಳ ಸಂಪರ್ಕ ಸೇತುವೆಯಾಗಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಮೂರು ಪಂಚಾಯಿತಿಗಳ ಜನರಿಗೆ ಇದರಿಂದ ಅನುಕೂಲ ಆಗಲಿದೆ. ಕ್ಷೇತ್ರದ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಲು ಪ್ರಯತ್ನಿಸುತ್ತಿದ್ದೇನೆ’ ಎಂದರು.
‘ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಗ್ರಾಮೀಣ ಭಾಗದ ಮೂಲ ಸೌಕರ್ಯಗಳಿಗೂ ಒತ್ತು ನೀಡಲಾಗಿದೆ. ಅಗತ್ಯತೆ ಮನಗಂಡು ಅಭಿವೃದ್ಧಿ ಮಾಡಲಾಗುತ್ತದೆ. ನಾಗೇತೋಟ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರೊ 45 ದಿನಗಳ ಒಳಗೆ ಗುಣಮಟ್ಟದಿಂದ ನಡೆಯಲಿದ್ದು, ಶೀಘ್ರ ಉದ್ಘಾಟನೆ ಮಾಡಲಾಗುತ್ತದೆ. ಮುಂದಿನ ವರ್ಷ ಇಲ್ಲಿ ರಸ್ತೆಯನ್ನೂ ಮಾಡಿಕೊಡಲಾಗುತ್ತದೆ’ ಎಂದು ಭರವಸೆ ನೀಡಿದರು.
ಬಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ ಮರಾಠಿ ಮಾತನಾಡಿ, ‘ನಾಗೇತೋಟದ ಭಾಗದ ಜನರು ದಶಕಗಳಿಂದ ಅರ್ಜಿ ಸಲ್ಲಿಸುತ್ತಲೇ ಬಂದಿದ್ದರು. ಶಾಸಕ ಭೀಮಣ್ಣ ನಾಯ್ಕ ಅವರು ಕಾಮಗಾರಿ ಮಂಜೂರು ಮಾಡಿಸಿದ್ದಾರೆ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಎಸ್.ಕೆ. ಭಾಗ್ವತ್, ಪ್ರವೀಣ ಗೌಡ ಪಾಟೀಲ, ಚಂದ್ರು ಗೌಡ, ಶಂಕರ, ಮಹಾಬಲೇಶ್ವರ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಕಾಸ ನಾಯ್ಕ ಇದ್ದರು.
ಭೂಮಿಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ನೇತೃತ್ವದಲ್ಲಿ ಬಂಡಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಇನ್ನಿತರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ಶಾಲು ಹೊದೆಸುವ ಮೂಲಕ ಶಾಸಕರು ಬರಮಾಡಿಕೊಂಡರು. ಶಾಸಕರ ಅಭಿವೃದ್ಧಿ ಕೆಲಸ ಮೆಚ್ಚಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ನೂತನವಾಗಿ ಸೇರ್ಪಡೆಗೊಂಡವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.