ಶಿರಸಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಶಿರಸಿಯ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಗೌರಿ ನಾಯ್ಕ ಹೇಳಿದರು.
ಅವರು ನಗರದ ಕಸ್ತೂರಬಾನಗರ ಕಾರ್ಯಕ್ಷೇತ್ರದ ಲಿಡ್ಕರ್ ಕಾಂಪ್ಲೆಕ್ಸ್ನ ಸಮುದಾಯ ಭವನದಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದ್ಗುರು ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಮ್ಮಿಕೊಂಡ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
‘ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ ನೀಡುವುದರ ಜತೆಗೆ ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿ ಕೃಷಿ ತರಬೇತಿ, ಪರಿಕರಗಳ ವಿತರಣೆ, ವಿದ್ಯಾರ್ಥಿ ವೇತನ, ಮದ್ಯಪಾನ ವರ್ಜನ ಶಿಬಿರ, ಪರಿಸರ ಕಾಳಜಿ, ಬೀಜ ಬಿತ್ತನೆ, ಬಡವರು ವಾಹನ ಖರೀದಿಸಲು ಸಾಲ ಸೌಲಭ್ಯ, ಅಂಗವಿಕಲರಿಗೆ ತ್ರಿಚಕ್ರ ವಾಹನಗಳ ವಿತರಣೆ ಹೀಗೇ ಹತ್ತು ಹಲವು ಜನಪರ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಾ ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮಾಭಿವೃದ್ಧಿ ಯೋಜನೆ ಸಂಜೀವಿನಿಯಾಗಿದೆ’ ಎಂದರು.
ಯೋಜನಾಧಿಕಾರಿ ರಾಘವೇಂದ್ರ ನಾಯ್ಕ ಮಾತನಾಡಿ, ಮಹಿಳೆಯರು ತಮ್ಮ ಕುಟುಂಬದಲ್ಲಿ ಸ್ವಂತ ನಿರ್ಧಾರ ತಳೆಯುವ ಶಕ್ತಿ ನೀಡುವ ಉದ್ದೇಶದಿಂದ ಜ್ಞಾನವಿಕಾಸ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.