ಶಿರಸಿಯ ಕಲಗಾರ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಯಾಣಿ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಮಂಗಳವಾರ ಭೇಟಿ ಪರಿಶೀಲಿಸಿದರು
ಶಿರಸಿ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಮಂಗಳವಾರ ಭೇಟಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುನಶ್ಚೇತನಗೊಳಿಸಲಾದ ಕಲಗಾರ ಗ್ರಾಮದ ಕಲ್ಯಾಣಿ ಕಾಮಗಾರಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಕೋಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಗತಿಯಲ್ಲಿರುವ ಅಡುಗೆಕೋಣೆ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಬಿಸಿಯೂಟ ತಯಾರಿಕೆಗೆ ಅನುವು ಮಾಡಿಕೊಡುವಂತೆ ಸೂಚಿಸಿದರು. ಈ ವೇಳೆ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ ಸಂವಹನ ನಡೆಸಿದರು.
ಹುಲೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಟ್ಟಡ ಹಾಗೂ ಅಲ್ಲಿನ ಸುವ್ಯವಸ್ಥೆ ಕುರಿತು ಪರಿಶೀಲಿಸಿ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದರು. ಔಷಧಿ ಮಳಿಗೆಯಲ್ಲಿ ಅವಶ್ಯಕತೆಗೆ ತಕ್ಕಂತೆ ಔಷಧಿ ಪೂರೈಕೆ, ರೋಗಿಗಳಿಗೆ ಬೆಡ್ ವ್ಯವಸ್ಥೆ, ಚಿಕಿತ್ಸಾ ಸಲಕರಣೆಗಳನ್ನು ಪರಿಶೀಲಿಸಿ ಯಾವುದೇ ಕುಂದುಕೊರತೆ ಆಗದಂತೆ ಚಿಕಿತ್ಸೆ ನೀಡಲು ಸಿದ್ದರಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಹುಲೇಕಲ್ ಗ್ರಾಮದ ಸಂಜೀವಿನಿ ಒಕ್ಕೂಟದಡಿ ಕೈಗೊಳ್ಳಲಾದ ಎಣ್ಣೆ ಹಾಗೂ ಹಿಟ್ಟಿನ ಗಿರಣಿಗೆ ಭೇಟಿ ನೀಡಿ, ‘ಮಹಿಳೆಯರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಇಂತಹ ಅಭಿವೃದ್ಧಿ ಚಟುವಟಿಕೆಗಳು ಇನ್ನೂ ಹೆಚ್ಚು ಅನುಕೂಲ ಕಲ್ಪಿಸುವಂತಾಗಲಿ’ ಎಂದರು.
ಉಂಚಳ್ಳಿ ಗ್ರಾಮ ಪಂಚಾಯಿತಿ ಹೊಸ ಕಟ್ಟಡವನ್ನು ವೀಕ್ಷಿಸಿದ ಅವರು ಈ ವೇಳೆ ಸ್ವಚ್ಛ ಸಂಕೀರ್ಣ ಘಟಕದ ಸಿಬ್ಬಂದಿ ಕೆಲಸ ಹಾಗೂ ಗ್ರಂಥಾಲಯ ಅಭಿವೃದ್ಧಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಯೋಜನಾಧಿಕಾರಿ ಅಶೋಕ ನಾಯ್ಕ, ವ್ಯವಸ್ಥಾಪಕ ಸುಬ್ರಾಯ ಭಟ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಶೀಘ್ರ ವರದಿ ನೀಡಿ:
‘ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಹೆಣ್ಣುಮಕ್ಕಳ ವಸತಿ ನಿಲಯಕ್ಕೆ ಭೇಟಿ ನೀಡಿದ ಡಾ. ದಿಲೀಷ್ ಶಶಿ ಅವರು ‘ಕಟ್ಟಡದಲ್ಲಿ ನೀರು ಸೋರಿಕೆ ತಡೆಗಟ್ಟಿ ಈ ಕುರಿತು ಶೀಘ್ರ ಮಾಹಿತಿಯನ್ನು ಜಿಲ್ಲಾ ಪಂಚಾಯಿತಿಗೆ ನೀಡಬೇಕು’ ಎಂದರು. ‘ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಬಿಸಿನೀರು ಆಹಾರ ಪದಾರ್ಥಗಳನ್ನು ಪರಿಶೀಲಿಸಿ ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯಾಗದಂತೆ ಆಹಾರ ನೀಡಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.