
ಕಾರವಾರ: ‘ಬಸ್, ಬಸ್ ನಿಲ್ದಾಣಗಳಲ್ಲಿ ಯುವತಿಯರು, ಮಹಳೆಯರೊಂದಿಗೆ ಅನುಚಿತವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಜರಗಿಸಿ. ಬಸ್ ನಿಲ್ದಾಣಗಳಲ್ಲಿ ಶೌಚಾಲಯ, ವಿಶ್ರಾಂತಿಗೃಹ ಸೌಕರ್ಯ ಒದಗಿಸಿ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್ ಬ್ಯಾಡಗಿ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.
‘ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ಬಸ್ಗಳ ಕಾರ್ಯಾಚರಣೆ ನಡೆಸಬೇಕು. ಗ್ರಾಮೀಣ ಪ್ರದೇಶಗಳಿಗೆ ಬಸ್ ಸಕಾಲದಲ್ಲಿ ಸಂಚರಿಸದ ದೂರು ಬರದಂತೆ ಎಚ್ಚರವಹಿಸಿ’ ಎಂದರು.
‘ಅನ್ನಭಾಗ್ಯ ಯೋಜನೆಯ ಅಕ್ಕಿಗಳು ಕಾಳಸಂತೆಯಲ್ಲಿ ಮಾರಾಟವಾಗುವ ಪ್ರಕರಣಗಳು ಜಿಲ್ಲೆಯಲ್ಲಿ ನಡೆಯದಂತೆ ಕ್ರಮವಹಿಸಬೇಕು. ಅಕ್ಕಿ ದುರುಪಯೋಗವಾಗದಂತೆ ನಿಗಾ ಇರಿಸಬೇಕು’ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಅನುಷ್ಠಾನವಾಗಿ ಎರಡು ವರ್ಷಕ್ಕೂ ಅಧಿಕವಾಗಿದ್ದು, ಈ ಹಿಂದೆ ಇ-ತಂತ್ರಾಂಶದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಯೋಜನೆಗಳ ರೂಪುರೇಷೆಗಳನ್ನು ರೂಪಿಸುವ ಅವಕಾಶ ಸಿಕ್ಕಿದ್ದು ಈಗ ಜಿಲ್ಲಾಮಟ್ಟದಲ್ಲಿ ಯೋಜನೆಗಳ ಅನುಷ್ಠಾನ ಮಾಡುವ ಅವಕಾಶ ಸಿಕ್ಕಿದೆ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅತ್ಯುತ್ತಮವಾಗಿದೆ’ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ, ಜನಾರ್ಧನ ದೇವಾಡಿಗ, ಸದಸ್ಯರಾದ ರಾಜೇಂದ್ರ ರಾಣೆ, ಪಾಂಡುರಂಗ ಗೌಡ, ರಿಯಾಜ್ ಬಾಬುಸಾಬ್, ಸುಮಾ ಉಗ್ರಾಣಕರ, ಅನಿಲ್ ದಂಡಗಲ್, ರಾಜಶೇಖರ ಹಿರೇಮಠ, ದೇವಿದಾಸ ಶಾನಭಾಗ, ಅಣ್ಣಪ್ಪ ನಾಯ್ಕ, ರಾಜು ನಾಯ್ಕ, ಅಶೋಕ ಗೌಡ, ರಾಜೇಶ ನಾಯ್ಕ, ಸತೀಶ ತಳೇಕರ, ಶಶಾಂಕ ಕಡವಾಡಕರ, ಸ್ನೇಹಾ ಹಳದನಕರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.