ADVERTISEMENT

ಕೇವಲ ಪ್ರಚಾರಕ್ಕಾಗಿ ಕುಮಾರಸ್ವಾಮಿ ಹೇಳಿಕೆ: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 12:18 IST
Last Updated 16 ಫೆಬ್ರುವರಿ 2021, 12:18 IST
ಶ್ರೀರಾಮುಲು
ಶ್ರೀರಾಮುಲು   

ಕಾರವಾರ: ‘ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುವುದು ಬೇಡ. ಕೇವಲ ಪ್ರಚಾರಕ್ಕಾಗಿ ಹೇಳಿಕೆಗಳನ್ನು ಕೊಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದರು.

‘ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆಯೋ ಗೊತ್ತಿಲ್ಲ’ ಎಂದು ಕುಮಾರಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ‘ನಮ್ಮ ದೇಶದಲ್ಲಿ ಹಿಟ್ಲರ್ ಆಡಳಿತ ಬಂದಿಲ್ಲ. ಮುಂದೆಯೂ ಬರಲು ನಮ್ಮ ಸರ್ಕಾರ ಬಿಡುವುದಿಲ್ಲ. ಆಧಾರವಿಲ್ಲದೇ ಅವರು ಕೊಡುತ್ತಿರುವ ಹೇಳಿಕೆಗಳಲ್ಲಿ ಸತ್ಯವಿಲ್ಲ. ಅವರ ಮನಸ್ಸಲ್ಲೂ ರಾಮಮಂದಿರ ಆಗಬೇಕು ಎಂದಿದೆ. ಅವರ ಪಕ್ಷದ ಶಾಸಕರೇ ದೇಣಿಗೆ ಕೊಟ್ಟಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.