
ಶಿರಸಿ: 'ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಂಕಗಳನ್ನು 33ಕ್ಕೆ ಇಳಿಸಿರುವ ಕುರಿತು ಹಲವು ಟೀಕೆಗಳು ಬಂದಿದ್ದವು. ಆದರೆ, ಇದು ಮಕ್ಕಳ ಉದ್ಯೋಗ ಮತ್ತು ಜೀವನದ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಕೈಗೊಂಡ ನಿರ್ಧಾರವಾಗಿದೆ' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ನಗರದ ಶಾಸಕರ ಮಾದರಿ ಶಾಲೆ ನಂ. 2ರಲ್ಲಿ ಭಾನುವಾರ ಶಿರಸಿ ಮತ್ತು ಸಿದ್ದಾಪುರ ತಾಲ್ಲೂಕುಗಳ 10 ಶಾಲೆಗಳ 20 ವಿವೇಕ ಕೊಠಡಿಗಳ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಹಿಂದಿನ ಸರ್ಕಾರಗಳ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಸರಿಯಾಗಿ ನಡೆಯದ ಕಾರಣ ಉಂಟಾಗಿದ್ದ ಕೊರತೆಯನ್ನು ಈಗಿನ ಸರ್ಕಾರ ನೀಗಿಸುತ್ತಿದೆ. ಅತಿಥಿ ಶಿಕ್ಷಕರನ್ನು ನೇಮಿಸುವ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ’ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ದಾಖಲೆ ಮಟ್ಟದ ಅನುದಾನ ನೀಡುತ್ತಿದೆ. ವಿರೋಧ ಪಕ್ಷದವರು ಸರ್ಕಾರದ ಬಳಿ ಹಣವಿಲ್ಲ ಎಂದು ಅನಗತ್ಯವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಣವಿಲ್ಲದಿದ್ದರೆ ಇಷ್ಟೆಲ್ಲಾ ಅಭಿವೃದ್ಧಿ ಕಾಮಗಾರಿಗಳು ಹೇಗೆ ಸಾಧ್ಯವಾಗುತ್ತಿದ್ದವು’ ಎಂದು ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪ್ರಮುಖರಾದ ಈಶ್ವರ ನಾಯ್ಕ, ಎಸ್.ಕೆ. ಭಾಗವತ, ಬಾಲಚಂದ್ರ ಭಟ್, ಕಿರಣ ನಾಯ್ಕ, ನಾಗರಾಜ ನಾಯ್ಕ, ಎಂ.ಎಚ್. ನಾಯ್ಕ ಇದ್ದರು.
ಡಿಡಿಪಿಐ ಡಿ.ಆರ್.ನಾಯ್ಕ ಸ್ವಾಗತಿಸಿದರು. ಶಿಕ್ಷಕ ಗಂಗಾಧರ ನಾಯ್ಕ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.