ಹಳಿಯಾಳ: ‘ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಆಗಬಾರದೆಂದು ಈಗಾಗಲೇ ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಲಾಗಿದೆ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
‘ಪ್ರಜಾವಾಣಿ’ ಪತ್ರಿಕೆಯಲ್ಲಿ ಸೋಮವಾರ ‘ನೀರು ಪಡೆಯಲು ನೂಕು ನುಗ್ಗಲು’ ಶೀರ್ಷಿಕೆಯಡಿ ಪ್ರಕಟವಾದ ವಿಶೇಷ ವರದಿಗೆ ಪ್ರತಿಕ್ರಿಯಿಸಿದರು.
‘ಈಗಾಗಲೇ ಕಳೆದ ವಾರ ಹಳಿಯಾಳ, ದಾಂಡೇಲಿ, ಜೋಯಿಡಾ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ, ತಹಶೀಲ್ದಾರ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡು ಕುಡಿಯುವ ನೀರಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಪುನಃ ಏಪ್ರಿಲ್ 19ರಂದು ಹಳಿಯಾಳ, ದಾಂಡೇಲಿ, ಜೋಯಿಡಾ ತಾಲ್ಲೂಕುಗಳ ತಹಶೀಲ್ದಾರ್ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು’ ಎಂದರು.
‘ಜನರು ಸಹ ಎಲ್ಲೆಂದರಲ್ಲಿ ಕೊಳವೆ ಬಾವಿ ತೋಡಬಾರದು. ನೀರಿನ ಮಟ್ಟದ ಪ್ರಮಾಣವನ್ನು ಅರೆತು ಕೊಳವೆ ಬಾವಿಯನ್ನು ತೊಡಬೇಕು. ಅತಿ ಸಣ್ಣ ರೈತರು, ಕೂಲಿಕಾರರಿಗೆ, ಮಹಿಳೆಯರಿಗೆ ಕೆಲಸ ಕೊಡಲು ಸಹ ಅವಕಾಶವನ್ನು ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೊಡಿಕೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.