ಕುಮಟಾ: ಅಕ್ರಮ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆಹಚ್ಚಲು ಸಾರಿಗೆ ಇಲಾಖೆಯೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದ್ದು, ತಾಲ್ಲೂಕಿನಲ್ಲಿ ನಾಲ್ಕು ಚಕ್ರಗಳ ವಾಹನ ಹೊಂದಿದ 88 ಅಕ್ರಮ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ' ಎಂದು ತಹಶೀಲ್ದಾರ್ ಮೇಘರಾಜ ನಾಯ್ಕ ಶುಕ್ರವಾರ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ತಿಳಿಸಿದರು.
ಅಕ್ರಮ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿದವರು ತಾವಾಗಿಯೇ ಅದನ್ನು ಸರ್ಕಾರಕ್ಕೆ ಮರಳಿಸಬೇಕು. ನಂತರ ಸಿಕ್ಕಿಬಿದ್ದವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳಿವೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದಾಗ, ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ ನಾಯ್ಕ, ಆಸ್ಪತ್ರೆಯಲ್ಲಿ ದಿನದ 24 ಗಂಟೆ ಕಾಲ ಸೇವೆ
ಲಭ್ಯವಿದೆ. ರಾತ್ರಿ ಕರ್ತವ್ಯ
ದಲ್ಲಿರುವ ವೈದ್ಯರು, ಸಿಬ್ಬಂದಿ ಊಟ, ತಿಂಡಿಗೆ ಹೋಗಿ ಬರುವಾಗ 15-20 ನಿಮಿಷ ವ್ಯತ್ಯಾಸ ಆಗಿರಬಹುದು. ಸಿಬ್ಬಂದಿ ಕರ್ತವ್ಯ ಪ್ರಜ್ಞೆಯ ಬಗ್ಗೆ ಪ್ರತಿ ನಿತ್ಯವೂ ಸೂಚನೆ ನೀಡಲಾಗುತ್ತದೆ ಎಂದರು.
ಪಶು ಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಮಾಹಿತಿ ನೀಡಿ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ ಪ್ರಯತ್ನಿಸುತ್ತೇನೆ
ಎಂದು ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ ಹೆಗಡೆ ಅವರಿಗೆ ತಿಳಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಬೇಸಿಗೆ ಅರಂಭವಾಗುತ್ತಿದ್ದಂತೆಯೇ ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿ ರುವುದರಿಂದ ತಾಲ್ಲೂಕಿನಲ್ಲಿ ನಾವು ಜಾಗೃತರಾಗಿರಬೇಕಾಗಿದೆ. ಮಂಗನ ಕಾಯಿಲೆ ಸಾಧ್ಯತೆ ಇರುವ ತಾಲ್ಲೂಕಿನ ಬೆಳ್ಳಂಗಿ, ಯಾಣ ಭಾಗದಲ್ಲಿ ಕಳೆದ ವರ್ಷ 400 ಜನರಿಗೆ ಎರಡು ಹಂತದ ಲಸಿಕೆ ನೀಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶ ಜನರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ನಕಲು ತೆಗೆದುಕೊಂಡು ಹೋಗಿ ಗ್ರಾಮ ಪಂಚಾಯ್ತಿ ಕಚೆರಿಗಳಲ್ಲಿ ಆಯುಷ್ಮಾನ್ ಆರೋಗ್ಯ ಚೀಟಿ ಮಾಡಿಸಿಕೊಳ್ಳಲು ಅವಕಾಶವಿದೆ.
ನಗರ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಬಹುದು. ಮನೆಯ ಪ್ರತಿಯೊಬ್ಬ ಸದಸ್ಯರು ಪ್ರತ್ಯೇಕ ಕಾರ್ಡ್ ಹೊಂದುವುದು ಅಗತ್ಯ ಎಂದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ವಿಜಯಾ ಪಟಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.