
ಹೊನ್ನಾವರ: 'ತಾಲ್ಲೂಕು ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರು ಹೊರಗಿನ ಔಷಧಕ್ಕೆ ಚೀಟಿ ಕೊಡದೆ ಆಸ್ಪತ್ರೆಯಲ್ಲೇ ಔಷಧ ನೀಡಬೇಕು ಹಾಗೂ ಮಂಗನಕಾಯಿಲೆ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು' ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತಾಕೀತು ಮಾಡಿದರು.
ಬುಧವಾರ ಇಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಹೋಗಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿ ಶಾಲೆ, ಅಂಗನವಾಡಿ, ಶೌಚಾಲಯ ಮೋದಲಾದವುಗಳಿಗೆ ಕಟ್ಟಡ ಅಗತ್ಯವಿದ್ದಲ್ಲಿ ಪಟ್ಟಿ ಮಾಡಿ ಎಲೆಚುಕ್ಕಿರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ.ಡಿಪೋದಲ್ಲಿ ಅಗತ್ಯ ಪ್ರಮಾಣದ ಕಟ್ಟಿಗೆ ಸಂಗ್ರಹ ಇರುವಂತೆ ನೋಡಿಕೊಳ್ಳಿ. ಇಲಾಖಾ ಅನುದಾನ ಮಾರ್ಚ್ 15ರೊಳಗೆ ಬಳಕೆಯಾಗುವಂತೆ ಕ್ರಮ ವಹಿಸಿ' ಎಂದು ಸಚಿವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಮೊದಲ ಬಾರಿಗೆ ಕರ್ನಾಟಕ ವಿದ್ಯುತ್ ನಿಗಮದ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ತಾಲ್ಲೂಕಿನ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ₹ 3.35 ಕೋಟಿ ಮಂಜೂರಾಗಿದೆ. ಪೋಸ್ಟ್ ಮೆಟ್ರಿಕ್ ಬಿಸಿಎಂ ಹಾಸ್ಟೆಲ್ ಆರಂಭಕ್ಕೆ ಅನುಮೋದನೆ ಸಿಕ್ಕಿದೆ' ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ತಹಶೀಲ್ದಾರ್ ಪ್ರವೀಣ ಕರಾಂಡೆ, ತಾಲ್ಲೂಕು ಪಂಚಾಯಿತಿ ಇಒ ಪುಟ್ಟೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.