ಅಂಕೋಲಾ: ಸಮುದ್ರ ತೀರಕ್ಕೆ ತೆರಳಿದ ಸೋದರ ಸಂಬಂಧಿಗಳಿಬ್ಬರೂ ಶುಕ್ರವಾರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ. ಬೇಳಾಬಂದರನ ಸಂದೀಪ ಬೀರಪ್ಪ ನಾಯ್ಕ (37) ಮೃತ ದುರ್ದೈವಿ. ಅವರ ಸಂಬಂಧಿ, ತೆಂಕಣಕೇರಿಯ ಚೇತನ ನಾಗೇಶ ನಾಯ್ಕ (19) ಅವರಿಗಾಗಿ ತೀವ್ರ ಶೋಧ ನಡೆದಿದೆ.
ಶುಕ್ರವಾರ ಮಧ್ಯಾಹ್ನ ತಾಲ್ಲೂಕಿನ ಶೇಡಿಕುಳಿಯ ಬಸಾಕಲ್ಲುಗುಡ್ಡದ ಬಳಿ ಈ ದುರ್ಘಟನೆ ನಡೆದಿದೆ.
ಇಬ್ಬರು ಸಮುದ್ರತೀರಕ್ಕೆ ಶುಕ್ರವಾರ ಮಧ್ಯಾಹ್ನ ತೆರಳಿದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ. ಸತತ ಪ್ರಯತ್ನದಿಂದ ಸಂದೀಪ ಅವರ ದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತ ಸಂದೀಪ ಪಟ್ಟಣದ ರಾಘವಿ ಆರ್ಟ್ಸ್ ಮಾಲೀಕರಾಗಿದ್ದಾರೆ. ಡಿ.ವೈ.ಎಸ್ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ, ಸಿ.ಪಿ.ಐ ಕೃಷ್ಣಾನಂದ ನಾಯಕ, ಪಿ.ಎಸ್.ಐ ಸಂಪತ್, ಕರಾವಳಿ ಕಾವಲು ಪಡೆ, ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.