ಕಾರವಾರ: ಜೊಯಿಡಾ ತಾಲ್ಲೂಕಿನ ಅಣಶಿ ಘಟ್ಟದ ಮೂಲಕ ರಾಜ್ಯ ಹೆದ್ದಾರಿ 34ರಲ್ಲಿ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶನಿವಾರ ಆದೇಶಿಸಿದ್ದಾರೆ.
ಕಾರವಾರದ ಜಿಲ್ಲಾ ಆಸ್ಪತ್ರೆಗೆ ಬರಲು, ಕೈಗಾ, ಮಲ್ಲಾಪುರ ಭಾಗದಲ್ಲಿ ಕೆಲಸಕ್ಕೆ ಬರಲು ಅನುಕೂಲವಾಗುವಂತೆ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನೀಡಿದ ವರದಿ ಆಧರಿಸಿ ಘಟ್ಟದ ರಸ್ತೆಯಲ್ಲಿ ಕೇವಲ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಇದೇರೀತಿ, ಅಗತ್ಯ ಸೇವೆ ಮತ್ತು ತುರ್ತು ಸೇವೆಗಳಿಗೆ ಸಂಬಂಧಿಸಿದ ಲಘು ವಾಹನಗಳ ಸಂಚಾರಕ್ಕೆ ಪರಿಸ್ಥಿತಿಗೆ ಅನುಗುಣವಾಗಿ ಸಂಜೆ 6ರ ನಂತರವೂ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಉಳಿದಂತೆ ಈ ಹಿಂದೆ ಜಾರಿ ಮಾಡಲಾದ ಆದೇಶದಲ್ಲಿರುವ ಷರತ್ತುಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಣಶಿ ಘಟ್ಟದಲ್ಲಿ ಭೂ ಕುಸಿತವಾಗಿ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿತ್ತು. ರಸ್ತೆಯ ಮೇಲಿದ್ದ ಮಣ್ಣನ್ನು ಸ್ಥಳೀಯರು ತೆರವು ಮಾಡಿದ್ದರು. ಆದರೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಅಲ್ಲದೇ ಬೆಳಿಗ್ಗೆ 6ರಿಂದ ಸಂಜೆ 6ರ ಅವಧಿಯಲ್ಲಿ ಮಾತ್ರ ಲಘು ವಾಹನಗಳಿಗೆ ಅವಕಾಶ ನೀಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.