ಶಿರಸಿ: ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಜಾತಿಗಣತಿಯನ್ನು ನಡೆಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಕ್ರಮವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಭವಿಷ್ಯದ ಯೋಜನೆಗಳನ್ನು ರೂಪಿಸಲು ಈ ಗಣತಿಯು ಬಲವಾದ ಅಡಿಪಾಯ ಒದಗಿಸಲಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದಂತೆ ಸೂಕ್ತ ನೀತಿಗಳನ್ನು ರೂಪಿಸಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ದತ್ತಾಂಶವು ನಿರ್ಣಾಯಕ ಪಾತ್ರವಹಿಸುತ್ತದೆ. ಸಮಗ್ರ ಮತ್ತು ನ್ಯಾಯಯುತ ಸಮಾಜ ನಿರ್ಮಿಸುವಲ್ಲಿ ಇದು ಮಹತ್ವದ ಕೊಡುಗೆ ನೀಡಲಿದೆ’ ಎಂದಿದ್ದಾರೆ.
ಈ ಬಾರಿ ಜನಗಣತಿ ಮತ್ತು ಜಾತಿ ಗಣತಿಯ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದು ಒಂದು ಪ್ರಮುಖ ಬದಲಾವಣೆಯಾಗಿದೆ. ಇದರಿಂದ ದತ್ತಾಂಶ ಸಂಗ್ರಹಣೆ ಮತ್ತು ವಿಶ್ಲೇಷಣೆಯ ಪ್ರಕ್ರಿಯೆಯು ಹೆಚ್ಚು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾಗಿರುತ್ತದೆ. ಪ್ರತಿಯೊಬ್ಬ ಪ್ರಜೆಯೂ ತಮ್ಮ ಮಾಹಿತಿಯನ್ನು ವೈಯಕ್ತಿಕವಾಗಿ ಸಲ್ಲಿಸುವ ಅವಕಾಶ ಹೊಂದಿರುವುದು ಈ ಪ್ರಕ್ರಿಯೆಯ ವಿಶ್ವಾಸಾರ್ಹತೆ ಹೆಚ್ಚಿಸುತ್ತದೆ. ಇದು ಕೇವಲ ಒಂದು ಸಂಖ್ಯೆಯ ಆಟವಲ್ಲ, ಬದಲಾಗಿ ಇದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿ ಗುರಿಯಾಗಿಟ್ಟುಕೊಂಡಿರುವ ಒಂದು ಮಹತ್ವದ ಹೆಜ್ಜೆಯಾಗಿದೆ. ಈ ಕ್ರಮವು ಭಾರತದ ಭವಿಷ್ಯದ ಅಭಿವೃದ್ಧಿಗೆ ಹೊಸ ದಿಕ್ಸೂಚಿ ನೀಡಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.