ಕಾರವಾರ: ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿದಿದೆ. ಆದರೆ, ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆ ಬಿದ್ದಿರುವ ಪರಿಣಾಮ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ.
ತಾಲ್ಲೂಕಿನ ಕದ್ರಾ ಜಲಾಶಯದಿಂದ ಕ್ರಸ್ಟ್ ಗೇಟುಗಳ ಮೂಲಕ 30 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. 34.50 ಮೀ. ವರೆಗೆ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 30 ಮೀ. ಎತ್ತರದವರೆಗೆ ನೀರು ಸಂಗ್ರಹವಾಗಿದೆ. ಒಳ ಹರಿವಿನ ಪ್ರಮಾಣ 45 ಸಾವಿರ ಕ್ಯುಸೆಕ್ ತಲುಪಿದ್ದು, ಜಲಾಶಯದಿಂದ 48 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.
ಜೊಯಿಡಾದ ಸೂಪಾ ಜಲಾಶಯದ ಒಳಹರಿವಿನ ಪ್ರಮಾಣ 45 ಸಾವಿರ ಕ್ಯುಸೆಕ್ ತಲುಪಿದ್ದು, ಜಲಾಶಯದಲ್ಲಿ ನೀರು ಸಂಗ್ರಹಣೆ ಪ್ರಮಾಣ 554 ಮೀ. ತಲುಪಿದೆ. ಜಲಾಶಯ ಭರ್ತಿಯಾಗಲು 10 ಮೀ. ಬಾಕಿ ಇದ್ದು, ಸದ್ಯದಲ್ಲಿಯೇ ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಕೆಪಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶರಾವತಿ ನದಿಯ ಜಲಾನಯನ ಪ್ರದೇಶದ, ಗರಿಷ್ಠ 1,819 ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ 1,812 ಅಡಿಗಳವರೆಗೆ ನೀರು ಸಂಗ್ರಹವಾಗಿದ್ದು ಗುರುವಾರ ಜಲಾಶಯದಿಂದ ನೀರು ಹೊರಬಿಡಲಾಗುವುದು ಎಂದು ಕೆಪಿಸಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೊನ್ನಾವರ ತಾಲ್ಲೂಕಿನ ಶರಾವತಿ ನದಿ ಪಾತ್ರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.