
ಯಲ್ಲಾಪುರ: ‘ಕಾಂಗ್ರೆಸ್ಸಿಗರಿಗೆ ರಾಮನನ್ನು ಕಂಡರೆ ಆಗುವುದಿಲ್ಲ. ವಿಬಿ ಜಿರಾಮ್ಜಿ ಯೋಜನೆಯಲ್ಲಿ ರಾಮನ ಹೆಸರು ಬಂದಿರುವುದಕ್ಕೆ ಅವರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಬಿಜೆಪಿ ಯಲ್ಲಾಪುರ ಮಂಡಲ ಪಟ್ಟಣದ ಅಡಿಕೆ ಭವನದಲ್ಲಿ ಭಾನುವಾರ ಆಯೋಜಿಸಿದ್ದ ವಿಬಿ ಜಿರಾಮ್ಜಿ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಗ್ಯಾರಂಟಿ ಕಾರಣದಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲೂ ಅವರಲ್ಲಿ ಹಣ ಇಲ್ಲ. ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ಪ್ರಧಾನಿಯವರು ಶ್ರಮಿಸುತ್ತಿದ್ದಾರೆ. ಎಲ್ಲರೂ ಇದಕ್ಕೆ ಕೈಜೋಡಿಸಬೇಕು’ ಎಂದರು.
ಶಾಸಕ ಶಿವರಾಮ ಹೆಬ್ಬಾರರ ಹೆಸರನ್ನು ಬಳಸದೇ ಪರೋಕ್ಷವಾಗಿ ಟೀಕಿಸಿದ ಅವರು, ‘ಪಕ್ಷವನ್ನು, ಕಾರ್ಯಕರ್ತರನ್ನು ಕಡೆಗಣಿಸಿ, ತಮ್ಮ ಲಾಭದ ಕಾರಣದಿಂದ ಹೋದವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯ ಇಲ್ಲ. ನಾವು ಮಾಡಬೇಕಾದ ಕಾರ್ಯಗಳತ್ತ ಗಮನ ಹರಿಸೋಣ’ ಎಂದರು.
ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿಬಿ ಜಿ ರಾಮ್ ಜಿ ಯೋಜನೆಯ ಮಹತ್ವವನ್ನು ಗ್ರಾಮ ಪಂಚಾಯಿತಿಯಿಂದ ಮನೆ ಮನೆಗೆ ತಲುಪಿಸಬೇಕಿದೆ. ಯೋಜನೆ ಬಗ್ಗೆ ಕಾಂಗ್ರೆಸ್ ಪ್ರಚಾರ ಮಾಡುತ್ತಿರುವ ಸುಳ್ಳುಗಳನ್ನು ಹಾಗೂ ಯೋಜನೆಯ ಮಹತ್ವವನ್ನು ಪ್ರತಿ ಪ್ರಜೆಗೂ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ’ ಎಂದರು.
ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ ಮಾತನಾಡಿ, ‘ಸಂಘಟನೆಯ ಜತೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಮೋರ್ಚಾ ಮಾಡುತ್ತಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಘವೇಂದ್ರ ಭಟ್ಟ, ರೂಪಾ ಬೂರ್ಮನೆ, ಪ್ರಮುಖರಾದ ಗೋಪಾಲಕೃಷ್ಣ ಗಾಂವ್ಕರ, ದೀಪಕ ಭಟ್ಟ, ಗಣೇಶ ಹೆಗಡೆ, ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿ ನಟರಾಜ ಗೌಡರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.