ಶಿರಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಇಲ್ಲಿನ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಾಗೂ ಒಳರೋಗಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.
ಯುವ ಕಾಂಗ್ರೆಸ್ ಘಟಕದ 50ಕ್ಕೂ ಹೆಚ್ಚು ಸದಸ್ಯರು ರಕ್ತದಾನ ಮಾಡಿದರು. ಆಸ್ಪತ್ರೆಯಲ್ಲಿರುವ ಒಳರೋಗಿಗಳಿಗೆ ಹಣ್ಣು, ಬ್ರೆಡ್ ಒಳಗೊಂಡ ಕಿಟ್ ವಿತರಣೆ ಮಾಡಿದರು. ಯುವ ಘಟಕದ ಅಧ್ಯಕ್ಷ ಸಂತೋಷ ಶೆಟ್ಟಿ ಮಾತನಾಡಿ, ‘ಕೋವಿಡ್ 19 ಸಾಂಕ್ರಾಮಿಕ ಕಾಯಿಲೆಯ ಸಂದರ್ಭದಲ್ಲಿ ರಾಜ್ಯದಾದ್ಯಂತ ರೋಗಿಗಳಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಈ ಕಾರಣಕ್ಕೆ ಡಿಕೆಶಿ ಜನ್ಮದಿನದ ಸಂದರ್ಭದಲ್ಲಿ ರಕ್ತದಾನ ಶಿಬಿರ ನಡೆಸಿ, ರಕ್ತದ ಕೊರತೆ ನೀಗಿಸುವ ಪ್ರಯತ್ನ ಮಾಡಲಾಗಿದೆ’ ಎಂದರು.
ನಗರಸಭೆ ಸದಸ್ಯರಾದ ಪ್ರದೀಪ ಶೆಟ್ಟಿ, ಶ್ರೀಕಾಂತ ತಾರೀಬಾಗಿಲು, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ, ಪ್ರಮುಖರಾದ ರಮೇಶ ದುಬಾಶಿ, ರವೀಂದ್ರ ನಾಯ್ಕ, ಸತೀಶ ನಾಯ್ಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.