ADVERTISEMENT

‘ಸುಳ್ಳಿನ ಸಂತೆಯಲ್ಲಿ ಕುಳಿತು ಅಧಿಕಾರ’

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 15:33 IST
Last Updated 24 ಸೆಪ್ಟೆಂಬರ್ 2021, 15:33 IST
ಶಿರಸಿಯ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರಭಿ ತ್ರಿವೇದಿ ಮಾತನಾಡಿದರು.
ಶಿರಸಿಯ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರಭಿ ತ್ರಿವೇದಿ ಮಾತನಾಡಿದರು.   

ಶಿರಸಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಹಲವು ವಿಚಾರ ಮುಂದಿಟ್ಟು ಯುವ ಕಾಂಗ್ರೆಸ್ ಉತ್ತರ ಕನ್ನಡ ಜಿಲ್ಲಾ ಘಟಕವು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಬೆಲೆ ಏರಿಕೆ ಖಂಡಿಸುವ ಸಲುವಾಗಿ ಹಳೆ ಬಸ್ ನಿಲ್ದಾಣ ವೃತ್ತದಿಂದ ಎತ್ತಿನಗಾಡಿಯಲ್ಲೇ ಉಪವಿಭಾಗಾಧಿಕಾರಿ ಕಚೇರಿವರೆಗೆ ಸಾಗಿದರು. ದ್ವಿಚಕ್ರ ವಾಹನವೊಂದರ ಅಣಕು ಶವಯಾತ್ರೆ ನಡೆಸಲಾಯಿತು. ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರಭಿ ತ್ರಿವೇದಿ, ‘ಬಿಜೆಪಿ ಸುಳ್ಳಿನ ಕಂತೆಯಿಂದಲೇ ಅಧಿಕಾರಕ್ಕೆ ಬಂದಿದೆ. ಬಡವರು, ದಲಿತರ ಹಿತ ಕಡೆಗಣಿಸಿ ಸುಳ್ಳಿನ ಸಂತೆಯಲ್ಲೇ ಕುಳಿತು ಅಧಿಕಾರ ನಡೆಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

ರಾಜ್ಯ ಘಟಕದ ಕಾರ್ಯದರ್ಶಿ ಆರಿಫ್, ‘ಸರ್ಕಾರದ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಧ್ವನಿ ಎತ್ತಿದವರ ಮೇಲೆ ಐಟಿ, ಇಡಿ ದಾಳಿ ನಡೆಸಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ’ ಎಂದರು.

‘ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹಿಂದೂ ದೇವಾಲಯಗಳನ್ನು ನಾಶ ಮಾಡಲು ಹೊರಟಿದೆ. ಜನಸಾಮಾನ್ಯರು ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಯಿಂದ ತತ್ತರಿಸಿದ್ದಾರೆ’ ಎಂದು ದೀಪಿಕಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಕಾರ್ಯದರ್ಶಿ ದಿಲೀಪ, ಅಬ್ದುಲ್ ದೇಸಾಯಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಶಿರಸಿ–ಸಿದ್ದಾಪುರ ಉಸ್ತುವಾರಿ ಸುಷ್ಮಾ ರಾಜಗೋಪಾಲ, ರವೀಂದ್ರ ನಾಯ್ಕ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ಶೆಟ್ಟಿ, ಉಪಾಧ್ಯಕ್ಷ ಕುಮಾರ ಜೋಶಿ, ಪ್ರಮುಖರಾದ ದೀಪಕ ದೊಡ್ಡೂರು, ಎಸ್.ಕೆ.ಭಾಗವತ, ಜಗದೀಶ ಗೌಡ, ಶ್ರೀನಿವಾಸ ನಾಯ್ಕ, ಸುಮಾ ಉಗ್ರಾಣಕರ, ಸತೀಶ ನಾಯ್ಕ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.