ವಿಜಯನಗರ (ಹೊಸಪೇಟೆ): ವೇತನ ಹೆಚ್ಚಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಕಾರ್ಯಕರ್ತೆಯರು ಸೋಮವಾರ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಕಚೇರಿ ಎದುರು ಧರಣಿ ನಡೆಸಿದರು.
ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಿಡಿಪಿಒ ಸಿಂಧು ಅಂಗಡಿ ಅವರಿಗೆ ಸಲ್ಲಿಸಿದರು.
ರಾಜ್ಯ ಸರ್ಕಾರ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ನಿರ್ಲಕ್ಷಿಸಿರುವುದು ಸರಿಯಲ್ಲ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಕಾರ್ಯಕರ್ತೆಯರು ಹಗಲಿರುಳು ಕೆಲಸ ಮಾಡಿದ್ದಾರೆ. 28 ಜನ ಜೀವ ಕಳೆದುಕೊಂಡಿದ್ದಾರೆ. ಕಠಿಣ ಸಂದರ್ಭದಲ್ಲೂ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ ಪೌಷ್ಟಿಕ ಆಹಾರ ತಲುಪಿಸಿದ್ದಾರೆ. ಮಲೆನಾಡಿನಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಓಡಾಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್, ಮಾತ್ರೆ ತಲುಪಿಸಿದ್ದಾರೆ ಎಂದು ತಿಳಿಸಿದರು.
ಇಲಾಖೆಯ ಕೆಲಸದ ಜತೆಗೆ ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸರ್ವೇ, ಬಿಪಿಎಲ್, ಆರ್ಸಿಎಚ್ ಕಾರ್ಡ್ ಸರ್ವೇ, ಭಾಗ್ಯಲಕ್ಷ್ಮಿ, ಮಾತೃವಂದನಾ, ಮಾತೃಶ್ರೀ, ಸ್ತ್ರೀಶಕ್ತಿ, ಚುನಾವಣೆ ಸೇರಿದಂತೆ ಇತರೆ ಕೆಲಸ ಮಾಡಿದ್ದಾರೆ. ಈಗ ಬೇಡಿಕೆ ಈಡೇರಿಸದಿದ್ದಾರೆ ಈ ಎಲ್ಲ ಕೆಲಸ ಬಹಿಷ್ಕರಿಸಲಾಗುವುದು. ಮಿನಿ ಅಂಗನವಾಡಿಗಳಲ್ಲಿ ಸಹಾಯಕಿಯರನ್ನು ಕೊಡುವವರೆಗೆ ಅಡುಗೆ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಂಘದ ಅಧ್ಯಕ್ಷೆ ನಾಗರತ್ನಮ್ಮ, ಶಕುಂತಲಾ, ಕೆಂಚಮ್ಮ, ಸುಮಂಗಲಾ, ಸುನೀತಾ, ಸಕ್ರಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.