ಹೊಸಪೇಟೆಯಲ್ಲಿ ಗುರುವಾರ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು
–ಪ್ರಜಾವಾಣಿ ಚಿತ್ರ
ಹೊಸಪೇಟೆ (ವಿಜಯನಗರ): ‘ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಪದ್ದತಿಯನ್ನು ನಾಗರಿಕ ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದಲೇ ವಿಶ್ವದಾದ್ಯಂತ ವಿರೋಧಿ ದಿನ ಆಚರಿಸಲಾಗುತ್ತಿದೆ, ನಾವು ಅದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ’ ಎಂದು ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಹೇಳಿದರು.
ಚಿತ್ತವಾಡ್ಗಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಉಚಿತ ಹಾಗೂ ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿಯೊಬ್ಬ ನಾಗರಿಕನ ಅದ್ಯ ಕರ್ತವ್ಯ. ಸಂಪೂರ್ಣವಾಗಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆಗೊಳಿಸಲು ಸರ್ಕಾರಗಳಿಂದಷ್ಟೇ ಸಾಧ್ಯವಿಲ್ಲ, ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರ ಅಗತ್ಯ’ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬಲಮತ್ತೂರ ಪ್ರಾಸ್ತಾವಿಕವಾಗಿ ಮಾತನಾಡಿ, ‘ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹20 ರಿಂದ 50 ಸಾವಿರದವರೆಗೆ ದಂಡ ಮತ್ತು ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ರಿಂದ 3 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ತಿಳಿಸಿದರು.
‘ಮಕ್ಕಳ ಸಹಾಯವಾಣಿ 1098, ಕಾರ್ಮಿಕರ ಸಹಾಯವಾಣಿ 155214, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು ದೂ.08022115291, 92 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು’ ಎಂದು ಹೇಳಿದರು.
ಇದೇ ವೇಳೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಕೀಲರಾದ ಶ್ವೇತಾಂಬರಿ, ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಹಾವಾಲ್ದಾರ್, ದೈಹಿಕ ಶಿಕ್ಷಣಾಧಿಕಾರಿ ಶ್ರೀಕಾಂತ, ಪ್ರಮುಖರಾದ ರುದ್ರಪ್ಪ ಅಕ್ಕಿ, ಲಿಂಗರಾಜ, ಈಶ್ವರ, ಕಾರ್ಮಿಕ ನಿರೀಕ್ಷಕರಾದ ಶಿವಶಂಕರ್ ತಳವಾರ್, ಜಿ.ಬಿ.ಧೂಪದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.