ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಖಾಸಗಿ ವಲಯಕ್ಕೂ ವಿಸ್ತರಿಸಬೇಕೆಂದು ಆಗ್ರಹಿಸಿ ಮೀಸಲಾತಿ ಹೆಚ್ಚಳದ ಜಾರಿಗಾಗಿ ಮತ್ತು ಖಾಸಗಿ ಕ್ಷೇತ್ರದಲ್ಲೂ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ವಿಸ್ತರಣೆಗಾಗಿ ಹೋರಾಟ ವೇದಿಕೆಯವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರದಿಂದ ಶೇ 2ರಷ್ಟು ಹುದ್ದೆಗಳನ್ನು ತುಂಬಲಾಗುತ್ತಿದೆ. ಶೇ 98ರಷ್ಟು ಉದ್ಯೋಗಾವಕಾಶಗಳು ಖಾಸಗಿ ವಲಯದಲ್ಲಿವೆ. ಖಾಸಗಿ ವಲಯಕ್ಕೆ ಮೀಸಲಾತಿ ಸೌಲಭ್ಯ ಒದಗಿಸಿದರೆ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟಂತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದರು.
ಸುಗ್ರೀವಾಜ್ಞೆ ಮೂಲಕ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಿಸಲಾಗಿದೆ. ಸಾಂವಿಧಾನಿಕ, ಕಾನೂನಿನ ತೊಡಕು ಎದುರಾಗದಂತೆ ಅದನ್ನು ಜಾರಿಗೊಳಿಸಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2 ಲಕ್ಷದ 80 ಸಾವಿರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಅನೇಕ ವರ್ಷಗಳಿಂದ ಭರ್ತಿ ಮಾಡದೆ ಇರುವ ಎಸ್ಸಿ/ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ತುರ್ತಾಗಿ ತುಂಬಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 40 ಲಕ್ಷ ಹುದ್ದೆಗಳನ್ನು ಭರ್ತಿಮಾಡಬೇಕು. ಎಸ್ಸಿ/ಎಸ್ಟಿ/ಒಬಿಸಿ ಸಮುದಾಯದ ಎಲ್ಲ ನಿರುದ್ಯೋಗಿ ಯುವಜನರಿಗೆ ಸರ್ಕಾರ ಉದ್ಯೋಗ ಕಲ್ಪಿಸಬೇಕು. ಉದ್ಯೋಗ ಕೊಡುವ ತನಕ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಮರಡಿ ಜಂಬಯ್ಯ ನಾಯಕ, ತಾಯಪ್ಪ ನಾಯಕ, ಸಣ್ಣ ಮಾರೆಪ್ಪ, ಗೋಪಾಲ, ನಾಗರತ್ನಮ್ಮ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.