ಹೊಸಪೇಟೆ(ವಿಜಯನಗರ): ವಿಶೇಷ ಭತ್ಯೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿ ಬಳಿ ಮಂಗಳವಾರ ಕಪ್ಪು ಪಟ್ಟಿ ಧರಿಸಿ, ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ವಿಶೇಷ ಭತ್ಯೆ ಹೆಚ್ಚಿಸಿ ಆದೇಶಿಸಲಾಗಿದೆ. ಅದೇ ರೀತಿ ಆಯುಷ್ ವೈದ್ಯರಿಗೂ ವಿಸ್ತರಿಸುವಂತೆ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆದರೆ, ಆಯುಷ್ ವೈದ್ಯರನ್ನು ಹೊರತುಪಡಿಸಿ ವಿಶೇಷ ಭತ್ಯೆ ನೀಡಿರುವುದು ಅಸಮಂಜಸ ಎಂದು ವೈದ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಬೇಡಿಕೆ ಈಡೇರುವವರೆಗೆ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸಲಾಗುವುದು. ಒಂದುವೇಳೆ ಜೂನ್ 7ರ ಒಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ಕೋವಿಡ್ ಕೆಲಸ ಬಹಿಷ್ಕರಿಸಿ, ಆಯುಷ್ ಇಲಾಖೆಯ ಚಿಕಿತ್ಸಾಲಯ, ಆಸ್ಪತ್ರೆಗೆ ಸೀಮಿತವಾಗಿ ಕೆಲಸ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಪಿ. ಮುನಿವಾಸುದೇವ ರೆಡ್ಡಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಆಯುಷ್ ವೈದ್ಯಾಧಿಕಾರಿಗಳಾದ ಮಂಜುನಾಥ್, ಶಿವಶರಣಯ್ಯ, ಕುಮಾರ್, ಪ್ರಸಾದ್, ಸರಸ್ವತಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.