ADVERTISEMENT

ಹೊಸಪೇಟೆ: 'ಪ್ರವಾಸೋದ್ಯಮದಿಂದ ಎರಡುವರೆ ನಿಮಿಷದಲ್ಲಿ ಒಂದು ಉದ್ಯೋಗ'

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 13:39 IST
Last Updated 27 ಸೆಪ್ಟೆಂಬರ್ 2021, 13:39 IST
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಎಸ್‌. ತಿಪ್ಪೇಸ್ವಾಮಿ, ವಸ್ತು ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ ಸಂಶೋಧನಾ ಕೇಂದ್ರದ ನಿರ್ದೇಶಕ ವಾಸುದೇವ ಬಡಿಗೇರ್, ಹೊಸಪೇಟೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ವೈ. ಶ್ರೀನಿವಾಸ್ ಬಾಬು, ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಎಸ್.ವೈ. ಸೋಮಶೇಖರ್ ಇದ್ದಾರೆ 
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಎಸ್‌. ತಿಪ್ಪೇಸ್ವಾಮಿ, ವಸ್ತು ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ ಸಂಶೋಧನಾ ಕೇಂದ್ರದ ನಿರ್ದೇಶಕ ವಾಸುದೇವ ಬಡಿಗೇರ್, ಹೊಸಪೇಟೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ವೈ. ಶ್ರೀನಿವಾಸ್ ಬಾಬು, ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಎಸ್.ವೈ. ಸೋಮಶೇಖರ್ ಇದ್ದಾರೆ    

ಹೊಸಪೇಟೆ (ವಿಜಯನಗರ): ‘ಪ್ರವಾಸೋದ್ಯಮದಿಂದ ಪ್ರತಿ ಎರಡುವರೆ ನಿಮಿಷದಲ್ಲಿ ಒಂದು ಉದ್ಯೋಗ ಸೃಷ್ಟಿಯಾಗುತ್ತದೆ’ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಎಸ್‌.ತಿಪ್ಪೇಸ್ವಾಮಿ ತಿಳಿಸಿದರು.

ವಿಶ್ವ ಪ್ರವಾಸೋದ್ಯಮ ದಿನದ ನಿಮಿತ್ತ ಸೋಮವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ, ಪ್ರವಾಸೋದ್ಯಮ ಇಲಾಖೆ ಹಾಗೂ ಬಳ್ಳಾರಿ/ವಿಜಯನಗರ ಹೋಟೆಲ್ ಮಾಲೀಕರ ಸಂಘದ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

‘ಪ್ರವಾಸೋದ್ಯಮ ಮತ್ತು ತೈಲೋದ್ಯಮ ಸದ್ಯ ಹೆಚ್ಚು ಬೇಡಿಕೆ ಇರುವ ಕ್ಷೇತ್ರಗಳು. ಅಷ್ಟೇ ಅಲ್ಲ, ಆದಾಯ ತಂದು ಕೊಡುವ ಕ್ಷೇತ್ರಗಳು ಹೌದು. ರಾಜ್ಯವು ಎರಡು ಪಾರಂಪರಿಕ ತಾಣಗಳಾದ ಪಟ್ಟದಕಲ್ಲು ಮತ್ತು ಹಂಪಿಯಿಂದ ಜಗತ್ತಿನಲ್ಲಿ ಗುರುತಿಸಿಕೊಂಡಿದೆ’ ಎಂದು ಹೇಳಿದರು.

ADVERTISEMENT

ಕುಲಪತಿ ಪ್ರೊ. ಸ.ಚಿ.ರಮೇಶ ಮಾತನಾಡಿ, ‘ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ನೈಸರ್ಗಿಕವಾಗಿಯೇ ಪ್ರವಾಸೋದ್ಯಮಕ್ಕೆ ಪ್ರೇರಣೆ ನೀಡುವ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಅನೇಕ ಪ್ರಸಿದ್ಧ ತಾಣಗಳನ್ನು ಹೊಂದಿದೆ. ಇವುಗಳನ್ನು ಇನ್ನಷ್ಟು ಆಕರ್ಷಕವಾಗಿ ಮಾಡುವ ಮೂಲಕ ವಿಜಯನಗರದ ಕಡೆಗೆ ಎಲ್ಲಾ ದಾರಿಗಳನ್ನು ತಿರುಗಿಸಬೇಕಾಗಿದೆ’ ಎಂದರು.

‘ವಿಜಯನಗರ ಜಿಲ್ಲೆಯು ಪ್ರಕೃತಿ, ಸಾಹಸಿ, ಐತಿಹಾಸಿಕ ಸೇರಿದಂತೆ ಸಮೂಹ ಪ್ರವಾಸೋದ್ಯಮಕ್ಕೆ ಯೋಗ್ಯವಾದ ಸಂಪನ್ಮೂಲ ಹೊಂದಿದೆ. ವಿಶ್ವಪಾರಂಪರಿಕ ತಾಣವಾದ ಹಂಪಿಯ ಪಕ್ಕದಲ್ಲಿರುವ ಕನ್ನಡ ವಿಶ್ವವಿದ್ಯಾಲಯವೂ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸುವ ಗಿರಿಸೀಮೆ, ಶಿಲ್ಪವನ ಹೊಂದಿದೆ’ ಎಂದು ತಿಳಿಸಿದರು.

ಹೊಸಪೇಟೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ವೈ. ಶ್ರೀನಿವಾಸ್ ಬಾಬು, ‘ವಿಜಯನಗರ ಜಿಲ್ಲೆಯೊಂದರಲ್ಲೇ ಆರು ದಿನಗಳ ಕಾಲ ಪ್ರವಾಸ ಕೈಗೊಳ್ಳುವಷ್ಟು ತಾಣಗಳಿವೆ. ಅದರ ಮೂಲಕ ಪ್ರವಾಸೋದ್ಯಮ ಬೆಳೆಸಬಹುದು’ ಎಂದರು. ಸಂಶೋಧನಾ ವಿದ್ಯಾರ್ಥಿನಿ ಶ್ವೇತಾ ಭಸ್ಮೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.