ಹೊಸಪೇಟೆ (ವಿಜಯನಗರ): ನಗರದಲ್ಲಿ ಬುಧವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು.
ನಗರದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ರ್ಯಾಲಿ ನಡೆಸಲಾಯಿತು. ಬಸ್ ನಿಲ್ದಾಣ, ಪುನೀತ್ ರಾಜಕುಮಾರ್ ವೃತ್ತದ ಮೂಲಕ ಹಾದು ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ ಕೊನೆಗೊಂಡಿತು. ಬಳಿಕ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಧ್ವಜ ಹಾರಿಸಲಾಯಿತು.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕರಾದ ಬಸವರಾಜ ಧಡೇಸುಗೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಮಹೇಶ್ ತೆಂಗಿನಕಾಯಿ, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಸಿದ್ದೇಶ್ ಯಾದವ್, ಪೂಜಪ್ಪ ಇದ್ದರು.
ಬಳಿಕ ಪಕ್ಷದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವರ್ಚುವಲ್ ಸಭೆಯ ನೇರ ಪ್ರಸಾರವನ್ನು ಕಾರ್ಯಕರ್ತರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಕೋರ್ ಕಮಿಟಿ ಸಭೆ:
ಏ.16,17ರಂದು ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಬುಧವಾರ ನಗರದಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಿತು.
‘ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ, ಆನಂದ್ ಸಿಂಗ್ ಸೇರಿದಂತೆ ಪಕ್ಷದ ಹಲವು ಮುಖಂಡರ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕಾರಿಣಿ ಸಿದ್ಧತೆಯ ಮಾಹಿತಿ ಪಡೆದರು. ಏ.16ರೊಳಗೆ ಎಲ್ಲ ರೀತಿಯ ಸಿದ್ಧತೆ ಪೂರ್ಣಗೊಳಿಸುವಂತೆ ಸೂಚಿಸಿದರು’ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಮಾಹಿತಿ ಹಂಚಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.