ಹೊಸಪೇಟೆ (ವಿಜಯನಗರ): ಕಾಂಗ್ರೆಸ್ ನಾಯಕರ ವರ್ಚಸ್ಸು ಕುಗ್ಗಿಸುವ ಹುನ್ನಾರದಿಂದ ರಾಜಕೀಯ ಪ್ರೇರಿತ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯ ವಿಷಯವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದರ ವಿರುದ್ಧ ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರವು ದುರುದ್ದೇಶದಿಂದ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಮೂಲಕ ವಿರೋಧ ಪಕ್ಷದ ನಾಯಕರ ಮೇಲೆ ದಾಳಿಗಳನ್ನು ನಡೆಸಿ, ತನಿಖೆ ಹೆಸರಿನಲ್ಲಿ ಅವರ ವರ್ಚಸ್ಸು ಕುಂದುವಂತೆ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ಕೃತ್ಯ ಎಂದು ಖಂಡಿಸಿದರು.
ನಂತರ ತಹಶೀಲ್ದಾರ್ ಗುರುಬಸವರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಾಯಕ ಶೆಟ್ಟರ್, ಮೊಹಮ್ಮದ್ ಇಮಾಮ್ ನಿಯಾಜಿ, ಗುಜ್ಜಲ ನಾಗರಾಜ್, ವೆಂಕಟರಾವ್ ಘೋರ್ಪಡೆ, ದೀಪಕ್ ಸಿಂಗ್, ರಾಜಶೇಖರ ಹಿಟ್ನಾಳ್, ಕುರಿ ಶಿವಮೂರ್ತಿ , ಗಾದಿಗನೂರು ಹಾಲಪ್ಪ, ಮಲಪನಗುಡಿ ಸಿದ್ದನಗೌಡ, ಪಾಲಪ್ಪ, ವೀರಸ್ವಾಮಿ, ವಿನಯ್ ಶೆಟ್ಟರ್, ಸೋಮಶೇಖರ್ ಬಣ್ಣದಮನೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.