ಹೊಸಪೇಟೆ (ವಿಜಯನಗರ): ಬಡವರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.
ನಗರದ ಶ್ರಮಿಕ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿದರು. ಅನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ಮಹೇಶಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯಲ್ಲಿ ಸಾವಿರಾರು ಜನ ನಿವೇಶನ, ಸೂರು ಇಲ್ಲದೆ ನಿರ್ಗತಿಕರಾಗಿದ್ದಾರೆ. ಜಿಲ್ಲಾಡಳಿತ ಕೈಗಾರಿಕೆಗಳಿಗೆ ಬೇಕಾಬಿಟ್ಟಿ ಸರ್ಕಾರಿ ಜಮೀನು ನೀಡುತ್ತಿದೆ. ಅದೇ ರೀತಿ ಬಡವರಿಗೂ ನಿವೇಶನ ಕೊಟ್ಟರೆ ಅವರಿಗೆ ಒಂದು ಆಸರೆಯಾಗುತ್ತದೆ. ಬಗರ್ ಹುಕುಂ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬಬೇಕು. ಅಂಗವಿಕಲರು, ಹಿರಿಯ ನಾಗರಿಕರು, ಪುನರ್ವಸತಿ ಕಲ್ಪಿತ ಮಾಜಿ ದೇವದಾಸಿ ಮಹಿಳೆಯರಿಗೆ ಮಾಸಿಕ ₹3 ಸಾವಿರ ಪಿಂಚಣಿ ನೀಡಬೇಕು. ಉದ್ಯೋಗ ಖಾತ್ರಿ ಕೆಲಸದ ದಿನಗಳನ್ನು 200 ದಿನಕ್ಕೆ ಹೆಚ್ಚಿಸಿ, ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ರೈತರು, ಬಡ ಮಹಿಳೆಯರ ಸರ್ಕಾರಿ ಮತ್ತು ಖಾಸಗಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, ಮುಖಂಡರಾದ ಮರಡಿ ಜಂಬಯ್ಯ ನಾಯಕ, ಗುನ್ನಳ್ಳಿ ರಾಘವೇಂದ್ರ, ವಿರೂಪಾಕ್ಷಪ್ಪ, ಯಲ್ಲಾಲಿಂಗ, ಗೋಪಾಲ್, ಮಂಜುನಾಥ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.