ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5.15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಏಳು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತೋರಣಗಲ್ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಹೆದ್ದಾರಿ ಪಕ್ಕದಲ್ಲೇ ಘಟನೆ: ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದು. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಬೆಳಿಗ್ಗೆ ಸ್ಟವ್ ಉರಿಸಲು ಕವಿತಾ ಅವರು ಯತ್ನಿಸಿದಾಗ ಒಮ್ಮಿಂದೊಮ್ಮೆಲೆ ಬೆಂಕಿ ಹತ್ತಿಕೊಂಡಿತು. ಸ್ಫೋಟದಿಂದ ಮನೆ ಶೇ 50ರಷ್ಟು ಧ್ವಂಸವಾಗಿದೆ. ಕವಿತಾ ಅವರಲ್ಲದೆ, ಹಾಲಪ್ಪ, ಮೈಲಾರಪ್ಪ, ಗಂಗಮ್ಮ, ಮಲ್ಲಮ್ಮ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಹೊಸಪೇಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.