ಹೊಸಪೇಟೆ: ಎಲ್ಲ ರೀತಿಯ ಸ್ವಚ್ಛತಾ ಕಾರ್ಮಿಕರ ಕೆಲಸ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಸಫಾಯಿ ಕರ್ಮಚಾರಿ, ಪೌರಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಯವರು ಶುಕ್ರವಾರ ಇಲ್ಲಿನ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗುತ್ತಿಗೆ ಪೌರಕಾರ್ಮಿಕರು, ಕಸ ಸಾಗಣೆ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರ ನಡುವೆ ಯಾವುದೇ ರೀತಿಯ ತರತಮ ಮಾಡದೇ ಎಲ್ಲರಿಗೂ ಸಮಾನ ವೇತನ ನೀಡಬೇಕೆಂದು ನಗರಸಭೆ ಅಧ್ಯಕ್ಷರು, ಪೌರಾಯುಕ್ತರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದರು.
ಮಹಿಳಾ ಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ವಿಶ್ರಾಂತಿ ಗೃಹ, ಹೆರಿಗೆ ರಜೆ– ಭತ್ಯೆ ನೀಡಬೇಕು. ಕಾಯಂ ಪೌರ ಕಾರ್ಮಿಕರ ಮಾದರಿಯಲ್ಲಿ ಎಲ್ಲ ಕಾರ್ಮಿಕರಿಗೂ ಗೃಹಭಾಗ್ಯ ಯೋಜನೆ ಜಾರಿಗೊಳಿಸಬೇಕು. ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರ ನೆರವು ನೀಡಬೇಕು. ನಿವೃತ್ತಿಯ ಸಮಯದಲ್ಲಿ ಕಾರ್ಮಿಕರಿಗೆ ಕನಿಷ್ಠ ₹10 ಲಕ್ಷ, ಮಾಸಿಕ ₹5,000 ಮಾಸಾಶನ ನೀಡಬೇಕು. ಸಾಮಾಜಿಕ ಭದ್ರತೆಗೆ ಕಾನೂನು ತರಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಸಣ್ಣ ಹನುಮಂತಪ್ಪ, ಕೇಶವ ನಾಯಕ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.