ADVERTISEMENT

ಹೊಸಪೇಟೆ: ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 8:46 IST
Last Updated 18 ಜನವರಿ 2022, 8:46 IST
ಕರ್ನಾಟಕ ಪ್ರಾಂತ ರೈತ ಸಂಘದವರು ಮಂಗಳವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ಪ್ರಾಂತ ರೈತ ಸಂಘದವರು ಮಂಗಳವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಅತಿವೃಷ್ಟಿಯಿಂದ ಜಿಲ್ಲೆಯಾದ್ಯಂತ ಹಾನಿಯಾದ ಬೆಳೆಗೆ ಶೀಘ್ರ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.

ಈ ಸಂಬಂಧ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಸಂಘದ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಈಡಾದ ಬಡ ರೈತ ಕುಟುಂಬಗಳ ಸಾಲ ಮನ್ನಾ ಮಾಡಬೇಕು. ಕೀಟನಾಶಕ ಔಷಧಿ, ಸಬ್ಸಿಡಿ ಸೌಲಭ್ಯ ಸಕಾಲಕ್ಕೆ ದೊರಕಿಸಿಕೊಡಬೇಕು. ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುವಂತೆ ಕಾಯ್ದೆ ಜಾರಿಗೆ ತರಬೇಕು. ಅರಣ್ಯ ಭೂಮಿಯಲ್ಲಿ ಒಕ್ಕಲುತನ ಮಾಡುವವರಿಗೆ ಪಟ್ಟಾ ನೀಡಬೇಕು ಎಂದು ಹಕ್ಕೊತ್ತಾಯ ಮಾಡಿದರು.

ADVERTISEMENT

ಬಡತನ ರೇಖೆಗಿಂತ ಕೆಳಗಿನವರಿಗೆ ಹತ್ತು ಕೆ.ಜಿ ಅಕ್ಕಿ, ₹10,000 ಕೋವಿಡ್‌ ನೆರವು ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಇನ್ನೂರು ದಿನ ಕೆಲಸ ಕೊಡಬೇಕು. ₹750 ಕನಿಷ್ಠ ಕೂಲಿ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಜಿ. ಕೆರೆ ಹನುಮಂತ, ಕಾರ್ಯದರ್ಶಿ ಎನ್‌. ಯಲ್ಲಾಲಿಂಗ, ಖಜಾಂಚಿ ಕೆ. ಕೆರೆ ಹನುಮಂತ, ಬಾಣದ ರಾಮಣ್ಣ, ಬಾಣದ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.