ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಶಾಸಕ ಎಚ್.ಆರ್.ಗವಿಯಪ್ಪ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರನ್ನು ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ವಿಜಯನಗರ ಜಿಲ್ಲೆ ನೂತನವಾಗಿ ರಚನೆಯಾಗಿದ್ದು, ಪ್ರವಾಸಿ ತಾಣ ಹಾಗೂ ಕೈಗಾರಿಕೆ ಕೇಂದ್ರಸ್ಥಾನವಾಗಿದೆ. ಅಲ್ಲದೆ ಈ ಭಾಗದಲ್ಲಿ ಕಾರ್ಮಿಕರು ಹಾಗೂ ಗಣಿಬಾಧಿಕ ಪ್ರದೇಶದಲ್ಲಿ ಬಡ ಕುಟುಂಬದವರು ಹೆಚ್ಚು ವಾಸವಾಗಿದ್ದಾರೆ.
ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆಯಲ್ಲಿ ಈಗಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಯಿಂದ 400 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಉಪವಿಭಾಗೀಯ ಮಟ್ಟದ ಆಸ್ಪತ್ರೆಯನ್ನು 100 ಹಾಸಿಗೆಯನ್ನು 150 ಹಾಸಿಗೆಗೆ ಹೆಚ್ಚಿಸಲಾಗುತ್ತಿದೆ. ತಾಯಿ ಮಕ್ಕಳ ಆಸ್ಪತ್ರೆಯನ್ನು 60 ಹಾಸಿಗೆಯಿಂದ 100 ಹಾಸಿಗೆಗೆ ಮೇಲ್ದರ್ಜೆಗೇರಿಸುವ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕೇಂದ್ರ ಸರ್ಕಾರದ ಯೋಜನೆಯಡಿ 50 ಹಾಸಿಗೆಯ ತುರ್ತು ಚಿಕಿತ್ಸಾ ಘಟಕವನ್ನು ಮಂಜೂರು ಮಾಡಲಾಗಿದೆ. ಹೊಸಪೇಟೆಯಲ್ಲಿ 700 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ.
ಈ ಭಾಗದಲ್ಲಿ ಉತ್ತಮ ಆಸ್ಪತ್ರೆಗಳ ಸೌಲಭ್ಯಗಳಿಲ್ಲದ ಕಾರಣ ದೂರದ ಹರಪನಹಳ್ಳಿ ಹಾಗೂ ಇತರೆ ಭಾಗದಿಂದ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ದೂರದ ಹುಬ್ಬಳ್ಳಿ ಹಾಗೂ ದಾವಣಗೆರೆಗೆ ತೆರಳಬೇಕಿದೆ.
ಹೀಗಾಗಿ ವಿಜಯನಗರ ಜಿಲ್ಲೆಗೆ ಪ್ರಸಕ್ತ ವರ್ಷದಲ್ಲಿಯೇ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿಕೊಡುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.